ಹೊಸಕೆರೆಹಳ್ಳಿ ಮೇಲ್ಸೇತುವೆ ಕಾಮಗಾರಿ ; 3 ತಿಂಗಳ ಗಡುವು ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

ಮೇಲ್ಸೇತುವೆ ಕಾಮಗಾರಿ ಶೇ. 75ರಷ್ಟು ಪೂರ್ಣಗೊಂಡಿದೆ. ಒಂದು ಬದಿಯಲ್ಲಿ ಕೆಳ ಹಾದು ಹೋಗುವ ರ್ಯಾಂಪ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸಂಚಾರ ಪೊಲೀಸ್ ವಿಭಾಗದೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್‌ ತಿಳಿಸಿದ್ದಾರೆ.;

Update: 2025-06-01 09:24 GMT

ಹೊಸಕೆರೆಹಳ್ಳಿ ಸಮೀಪದ ಮೇಲ್ಸೇತುವೆ ಕಾಮಗಾರಿಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರು ಪರಿಶೀಲಿಸಿದರು

ಬೆಂಗಳೂರಿನ ಹೊರವರ್ತುಲ ರಸ್ತೆ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ ಕುಂಟುತ್ತಾ ಸಾಗಿರುವ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಭಾನುವಾರ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ವೇಳೆ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ 500 ಮೀಟರ್‌ ಉದ್ದದ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದರು.

ಮೇಲ್ಸೇತುವೆ ಕಾಮಗಾರಿ ಶೇ. 75ರಷ್ಟು ಪೂರ್ಣಗೊಂಡಿದೆ. ಒಂದು ಬದಿಯಲ್ಲಿ ಕೆಳ ಹಾದು ಹೋಗುವ ರ್ಯಾಂಪ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸಂಚಾರ ಪೊಲೀಸ್ ವಿಭಾಗದೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ನಾಯಂಡಹಳ್ಳಿ ಜಂಕ್ಷನ್‌ ಸಮೀಪದ ಪಾದಚಾರಿ ಮಾರ್ಗದಲ್ಲಿ ಸುರಿದ ಅನುಪಯುಕ್ತ ವಸ್ತುಗಳನ್ನು ತೆಗೆದು ಹಾಕಿ, ಒತ್ತುವರಿ ತೆರವುಗೊಳಿಸಬೇಕು. ಮೇಲ್ಸೇತುವೆ ಕೆಳಭಾಗದಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಾಯಂಡಹಳ್ಳಿ ಜಂಕ್ಷನ್‌ನ ವೃಷಭಾವತಿ ಕಾಲುವೆ ಮೇಲ್ಭಾಗದಲ್ಲಿ ಹೆಚ್ಚುವರಿ ಬ್ರಿಡ್ಜ್‌ವೆಂಟ್‌ ನಿರ್ಮಿಸಲು ವಿಶ್ವಬ್ಯಾಂಕ್‌ನಿಂದ ಅನುದಾನ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅನುದಾನ ಲಭಿಸಿದ ಕೂಡಲೇ ಟೆಂಡರ್‌ ಅಂತಿಮಗೊಳಿಸಿ, ಕಾಲಮಿತಿಯೊಳಗೆ ಕೆಲಸ ಪೂರ್ಣಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು. ವೃಷಭಾವತಿ ಕಾಲುವೆಯಲ್ಲಿ ಒಳಚರಂಡಿ ಕೊಳವೆಗಳು ಹಾದು ಹೋಗಿದ್ದು, ಅವು ಸೋರುತ್ತಿವೆ. ತಕ್ಷಣವೇ ಸೋರಿಕೆ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂಸ್ವಾಧೀನ ವಿಳಂಬದಿಂದ ಕೆಲಸ ಸ್ಥಗಿತ

''ಮೈಸೂರು ರಸ್ತೆಯ ರಾಜರಾಜೇಶ್ವರಿನಗರ ಪ್ರವೇಶ ದ್ವಾರದ ಬಳಿ ಕೈಗೊಂಡಿರುವ ಕಾಮಗಾರಿಗೆ 33 ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಭೂಸ್ವಾಧೀನ ವಿಳಂಬದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿ ಕೈಗೊಳ್ಳಬೇಕು. ರಾಜಕಾಲುವೆ ಒತ್ತುವರಿಯಾಗಿದ್ದರೆ ಸರ್ವೇ ನಡೆಸಿ ತೆರವು ಮಾಡಬೇಕು. ಬಿಎಚ್‌ಇಎಲ್‌ ಜಂಕ್ಷನ್‌ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮಹೇಶ್ವರ ರಾವ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

Tags:    

Similar News