ಪ್ರಾಸಿಕ್ಯೂಷನ್ ಅನುಮತಿ ನೀಡುವ ಮೊದಲು ಪ್ರಾಥಮಿಕ ತನಿಖೆ ನಡೆಯಬೇಕು; ಸಚಿವ ಕೃಷ್ಣ ಭೈರೇಗೌಡ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೊದಲು ಪ್ರಾಥಮಿಕ ತನಿಖೆ ನಡೆಯಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

Update: 2024-08-18 11:03 GMT
ಕಂದಾಯ ಸಚಿವ ಕೃಷ್ಣ ಭೈರೇಗೌಡ
Click the Play button to listen to article

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೊದಲು ಪ್ರಾಥಮಿಕ ತನಿಖೆ ನಡೆಯಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಸರ್ಕಾರ ಸೆಪ್ಟೆಂಬರ್ 3, 2021 ರಲ್ಲಿ 17 ಎ ಸೆಕ್ಷನ್ ಅನ್ನು ಹೇಗೆ ಪರಿಗಣಿಸಬೇಕೆಂದು ನಿಯಮಾವಳಿ ರೂಪಿಸಿದ್ದಾರೆ. ಅಂದರೆ ಪೊಲೀಸ್ ಅಧಿಕಾರಿ ಒಂದು ಹುದ್ದೆಯಲ್ಲಿ ಇರುವ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಲು ಈ ಸೆಕ್ಷನ್ ಅಡಿ ಅನುಮತಿ ಪಡೆಯಬೇಕು. ಪ್ರಸ್ತುತ ಈ ಪ್ರಕರಣದಲ್ಲಿ ಯಾವ ಪೊಲೀಸ್ ಅಧಿಕಾರಿ ಅನುಮತಿ ಪಡೆದಿದ್ದಾರೆ? 17 ಎ ಸೆಕ್ಷನ್ ಇರುವುದೇ ಪೊಲೀಸ್ ಅಧಿಕಾರಿಗಳು ಅನುಮತಿ ಪಡೆಯುವ ಸಲುವಾಗಿ. ಯಾವ ಪೊಲೀಸ್ ಅಧಿಕಾರಿಯು ತನಿಖೆಗೆ ಅನುಮತಿ ನೀಡಿ ಎಂದು ನಿಮಗೆ ವರದಿ ನೀಡಿದ್ದಾರೆ? ಯಾವ ಪೊಲೀಸ್ ಅಧಿಕಾರಿ ನಿಮಗೆ ಅನುಮತಿ ಕೇಳಿದ್ದಾರೆ ಆ ದಾಖಲೆ ಕೊಡಿ ಎಂದು ರಾಜ್ಯಪಾಲರನ್ನು ಪ್ರಶ್ನಿಸಿದ್ದಾರೆ.

ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ

ಪೊಲೀಸ್ ಅಧಿಕಾರಿಗಳು ತನಿಖೆಗೆ ಅನುಮತಿ ನೀಡಿ ಎಂದು ಈ ಹಿಂದೆ ಕೇಳಿರುವ ನಾಲ್ಕು ಪ್ರಕರಣಗಳು ನಿಮ್ಮ ಮುಂದೆ ಬಾಕಿ ಇವೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ಏಕೆ ನೀಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಾಗ ಪ್ರಕರಣದಲ್ಲಿ ತಪ್ಪು ಮಾಡಿರುವವರ ವಿರುದ್ಧ ದಾಖಲೆ ಇರಬೇಕು. ಯಾರ ಮೇಲೆ ಆಪಾದನೆ ಬಂದಿದೆ ಅವರು ಯಾವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಪೊಲೀಸರು ರಾಜ್ಯಪಾಲರಿಗೆ ನೀಡಬೇಕು. ಆಗ ಮಾತ್ರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಸಾಧ್ಯ. ಭಾರತ ಸರ್ಕಾರವು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮುಂಚೆ ಯಾವ, ಯಾವ ದಾಖಲೆಗಳನ್ನು ಒದಗಿಸಬೇಕು ಎಂಬುದಕ್ಕೆ ಪಟ್ಟಿಯನ್ನು ನೀಡಿದ್ದಾರೆ. ಇವುಗಳಲ್ಲಿ ಒಂದೇ ಒಂದು ದಾಖಲೆಯನ್ನು ರಾಜ್ಯಪಾಲರು ತೋರಿಸಲಿ ಎಂದು ಅವರು ಸವಾಲು ಹಾಕಿದರು.

ಒಂದು ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ

ತನಿಖೆಗೆ ಅನುಮತಿ ಕೊಡಿ ಎಂದು ಮನವಿ ಮಾಡುವ ಅಧಿಕಾರ ಇರುವುದು ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ಮಾತ್ರ. ಪ್ರಸ್ತುತ ರಾಜ್ಯಪಾಲರು ಅನುಮತಿ ನೀಡಿರುವುದು ಸಂಪೂರ್ಣ ಕಾನೂನುಬಾಹಿರ. ಇತ್ತೀಚಿಗೆ ಜಸ್ಟಿಸ್ ನಾಗರತ್ನ ಅವರು ರಾಜ್ಯಪಾಲರು ಕೇವಲ ಒಂದು ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಸಿದ್ದರಾಮಯ್ಯನವರು ಬಹುಮತ ಪಡೆದು ಆಯ್ಕೆಯಾದ ಮುಖ್ಯಮಂತ್ರಿ. ಕನ್ನಡಿಗರ ಸ್ವಾಭಿಮಾನದ ಸಂಕೇತ ಇವರು. ದೆಹಲಿಯಲ್ಲಿರುವ ಸರ್ಕಾರದ ಅಡಿಯಾಳಾಗಿ ಕೆಲಸ ಮಾಡಲು ಅವರು ಒಪ್ಪುವುದಿಲ್ಲ. ಕರ್ನಾಟಕದ ಮೇಲೆ ಕನ್ನಡಿಗರ ಮೇಲೆ ಮಾಡುತ್ತಿರುವ ಪ್ರಹಾರ ಇದು ಎಂದು ಅವರು ತಿಳಿಸಿದರು.

ರಾಜ್ಯಪಾಲರ ನಡೆ ಕಾನೂನು ಬಾಹಿರ ;ಎಚ್.ಕೆ. ಪಾಟೀಲ್

ಈ ಪ್ರಕರಣಕ್ಕೆ ಸಂಬಂಧಿಸಿಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಜ್ಯಪಾಲರ ನಡೆ ಕಾನೂನು ಬಾಹಿರ, ತತ್ವ ರಹಿತ, ರಾಜಕೀಯ ಪ್ರೇರಿತವಾದಂತಹ ನಿರ್ಧಾರ. ಕೆಟ್ಟ ಬೆಳವಣಿಗೆಗೆ ಆಸ್ಪದ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳಲ್ಲಿ 6 ತಿಂಗಳಲ್ಲಿ ಪತನವಾಗುತ್ತದೆ ಎಂದು ಪದೇ ಪದೇ ಹೇಳುತ್ತಿದ್ದರು. 10 ದಿನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತು ಬರುತ್ತದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರು. ರಾಜ್ಯಪಾಲರ ನಡೆಯಿಂದ ಇವರ ಕುತಂತ್ರ ಕನ್ನಡದ ಜನತೆಗೆ ಗೊತ್ತಾಗಿದೆ. ಕನ್ನಡಿಗರ ಬಹುಮತದ ಮೇಲೆ ಆಯ್ಕೆಯಾಗಿರುವ ಸಿದ್ದರಾಮಯ್ಯನವರನ್ನು ಹಾಗೂ ಕಾಂಗ್ರೆಸ್ ಸರ್ಕಾರವನ್ನು ಯಾವುದೇ ಕುತಂತ್ರದ ಮೂಲಕ ಬುಡಮೇಲು ಮಾಡಲು ಆಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯನವರು ಅತ್ಯಂತ ದಿಟ್ಟ ನಿಲುವುಗಳನ್ನು ತೆಗೆದುಕೊಂಡಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು, ಬರ ಪರಿಹಾರ ನೀಡುವಲ್ಲಿ ವಿಳಂಬದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ ಕಾರಣಕ್ಕೆ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಅವರು ದೂರಿದರು.

Tags:    

Similar News