Actor Darshan Case | ದರ್ಶನ್‌-ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ

Update: 2024-12-03 13:28 GMT
Actor Darshan Case | ದರ್ಶನ್‌-ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 6ಕ್ಕೆ ಮುಂದೂಡಿದೆ.

ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ಈ ಮುನ್ನ ಹೈಕೋರ್ಟ್ನಲ್ಲಿ ವಾದ ಮಂಡಿಸಿ ನಟನಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ಮಂಗಳವಾರ (ಡಿ.3) ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಸೆಬಾಸ್ಟಿಯನ್ ವಾದ ಮಂಡಿಸಿದರು.

ಸದ್ಯ ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್, ಸಾಮಾನ್ಯ ಜಾಮೀನು ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಹಾಗೆಯೇ ಪ್ರಕರಣದ ಏ1 ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ, ಅವರ ಸಹಚರರಾದ ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಜಾಮೀನು ಕೋರಿರುವ ಆರೋಪಿಗಳ ಅರ್ಜಿಗಳ ಕುರಿತು ಕಳೆದ ಕೆಲವು ದಿನಗಳಿಂದ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ.

ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಡಿಸೆಂಬರ್ 6ರಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಲಿದ್ದಾರೆ. ಆ ಬಳಿಕ ಜಾಮೀನಿಗೆ ಸಂಬಂಧಿಸಿದ ತೀರ್ಪನ್ನು ಹೈಕೋರ್ಟ್ ನೀಡಲಿದೆ. ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ.

ದರ್ಶನ್ಗೆ ಬಳ್ಳಾರಿ ಜೈಲಿನಲ್ಲಿ ಇದ್ದಾಗ ಬೆನ್ನು ನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರಿಂದ ಮಧ್ಯಂತರ ಜಾಮೀನು ನೀಡಲಾಗಿತ್ತು. ಆದರೆ ಈವರೆಗೂ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಲ್ಲ. ಬಿಪಿ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆಯನ್ನು ಸದ್ಯಕ್ಕೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

ಈ ನಡುವೆ, ನಟ ದರ್ಶನ್ ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಶವದ ಪಕ್ಕ ಇರುವ ಫೋಟೋವನ್ನು ಆರೋಪಿಯೊಬ್ಬನ ಮೊಬೈಲ್ನಿಂದ ರಿಟ್ರೀವ್ ಮಾಡಿರುವ ತನಿಖಾಧಿಕಾರಿಗಳು, ದರ್ಶನ್ಗೆ ಜಾರಿ ಮಾಡಿರುವ ಮಧ್ಯಂತರ ಜಾಮೀನನ್ನು ರದ್ದುಮಾಡುವಂತೆ ಕೋರ್ಟಿನ ಮೊರೆ ಹೋಗಿದ್ದಾರೆ.

Tags:    

Similar News