ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿವಾದ; ಪ್ರಧಾನಿ, ಕೇಂದ್ರ ಸಚಿವರ ಭೇಟಿಗೆ ರಾಜ್ಯ ಸರ್ಕಾರ ನಿರ್ಧಾರ

ದೇವೇಂದ್ರ ಫಡ್ನವೀಸ್ ಅವರು ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಒಳಗೆ ಉತ್ತರ ಪತ್ರ ಬರೆಯಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.;

Update: 2025-06-03 11:47 GMT

ಕೃಷ್ಣಾ ನದಿಯ ಆಲಮಟ್ಟಿ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ಎತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚಿಸಲು ಕರ್ನಾಟಕ ಸರ್ಕಾರದ ಪ್ರತಿನಿಧಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಗೆ ಸಮಯ ಕೇಳಲು ನಿರ್ಧರಿಸಿದ್ದಾರೆ.

ಏತನ್ಮಧ್ಯೆ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಂದ ಬಂದಿರುವ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ದಿನಗಳಲ್ಲಿ ಉತ್ತರ ಪತ್ರ ಬರೆಯಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಈ ಹೆಚ್ಚಳವು ಕರ್ನಾಟಕದ ಒಣ ಪ್ರದೇಶಗಳಿಗೆ ನೀರಾವರಿ ಸೌಲಭ್ಯವನ್ನು ವಿಸ್ತರಿಸಲು ಮತ್ತು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಆದರೆ, ಈ ಯೋಜನೆಗೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಿಂದ ವಿರೋಧವಿದೆ. ನ್ಯಾಯಾಧಿಕರಣವು ಎತ್ತರಿಸಲು ಅನುಮತಿ ನೀಡಿದ ಹೊರತಾಗಿಯೂ, ಇದೀಗ ಮಹಾರಾಷ್ಟ್ರ ಸಿಎಂ ಅನಗತ್ಯ ತಗಾದೆ ಎತ್ತಿದ್ದಾರೆ.

ಕೇಂದ್ರಕ್ಕೂ ಫಡ್ನವಿಸ್​  ಪತ್ರ

ದೇವೇಂದ್ರ ಫಡ್ನವೀಸ್ ಅವರು ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಒಳಗೆ ಉತ್ತರ ಪತ್ರ ಬರೆಯಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. "ನಾನು ಈಗಾಗಲೇ ನನ್ನ ಅಭಿಪ್ರಾಯವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಟ್ಟಿದ್ದೇನೆ. ಸಿಎಂ ಬರೆಯುವ ಪತ್ರವನ್ನು ರಾಜ್ಯದ ಎಲ್ಲಾ ಸಂಸದರಿಗೆ ಕಳುಹಿಸಿಕೊಡುತ್ತೇನೆ. ಆ ನಂತರ, ಈ ವಿಷಯವನ್ನು ಚರ್ಚಿಸಲು ಪ್ರಧಾನಮಂತ್ರಿ ಮತ್ತು ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ದಿನಾಂಕ ಕೋರಲಾಗುವುದು," ಎಂದು ಶಿವಕುಮಾರ್ ಹೇಳಿದರು. ಕರ್ನಾಟಕ ಸರ್ಕಾರವು ಈ ವಿಷಯದಲ್ಲಿ ಒಗ್ಗಟ್ಟಿನಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉದ್ದೇಶಿಸಿದ್ದು, "ನಾವೆಲ್ಲರೂ ಸೇರಿ ಈ ವಿಷಯದಲ್ಲಿ ಒತ್ತಾಯ ಮಾಡಲೇಬೇಕು. ಆಲಮಟ್ಟಿ ಎತ್ತರ ಹೆಚ್ಚಳವು ಕರ್ನಾಟಕದ ನೀರಾವರಿ ಮತ್ತು ಆರ್ಥಿಕ ಅಭಿವೃದ್ಧಿಗೆ ಅತ್ಯಗತ್ಯ," ಎಂದು ಶಿವಕುಮಾರ್ ಒತ್ತಿಹೇಳಿದರು.

Tags:    

Similar News