Mysore MUDA Scam | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ನಕಲಿ ದಾಖಲೆ ಸೃಷ್ಟಿಸಿ ತಮ್ಮ ಪ್ರಭಾವ ಬಳಿಸಿ ಬಡವರ ಜಮೀನು ಡಿ-ನೋಟಿಫೈ ಮಾಡಿದ ಆರೋಪದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

Update: 2024-08-06 08:54 GMT

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಲು ಅನುಮತಿ ಕೋರಿ ಟಿ ಜೆ ಅಬ್ರಾಹಂ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಇದೀಗ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು, ರಾಜ್ಯಪಾಲರಿಗೆ‌ ಮತ್ತೊಂದು ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿ-ನೋಟಿಫೈ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದಾಖಲೆಗಳ ಸಮೇತ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ ಏನಿದೆ?

ʻʻಮೈಸೂರು ತಾಲೂಕು ವರುಣಾ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನನ್ನು ಆಶ್ರಯ ಯೋಜನೆಯಡಿ ನಿವೇಶನ ಇಲ್ಲದವರಿಗೆ ಮತ್ತು ಹಿಂದುಳಿದವರಿಗೆ ನೀಡಲು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿತ್ತು. ಬಳಿಕ ಜಮೀನಿನ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ಹಂಚಲಾಗಿತ್ತು. ಆದರೆ, ಸದರಿ ಜಮೀನಿನಲ್ಲಿ ಮೂಲಭೂತ ಸೌಕರ್ಯ ಇಲ್ಲದ ಕಾರಣ ಫಲಾನುಭವಿಗಳು ಮನೆ ನಿರ್ಮಾಣ ಮಾಡಿರಲಿಲ್ಲ. ಈ ಜಮೀನು ಖಾಲಿ ಬಿದ್ದಿತ್ತು. 30 ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿ-ನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುವುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ. ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ" ಎಂದು ದೂರಿನಲ್ಲಿ ವಿವರಿಸಲಾಗಿದೆ.

"ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿ-ನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ನಿವೇಶನದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ತಮ್ಮ ಜಮೀನು ತಮಗೆ ನೀಡುವಂತೆ ಮನವಿ ಮಾಡಿದ್ದರುʼʼ ಎಂದು ವಿವರಿಸಿರುವ ಸ್ನೇಹಮಯಿ ಎಂಬುವರು, ನಕಲಿ ದಾಖಲೆ ಸೃಷ್ಟಿಸಿ ತಮ್ಮ ಪ್ರಭಾವ ಬಳಿಸಿ ಬಡವರ ಜಮೀನು ಡಿ-ನೋಟಿಫೈ ಮಾಡಿದ ಆರೋಪದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

Tags:    

Similar News