ಬಾಗಲಕೋಟೆ ನವನಗರದ 200 ಎಕರೆ 'ವಾಣಿಜ್ಯ' ನಿವೇಶನಗಳಾಗಿ ಪರಿವರ್ತಿಸಲು ಪ್ರಸ್ತಾವನೆ: ಡಿಸಿಎಂ
ಮುಳುಗಡೆ ಸಂತ್ರಸ್ತರಾದ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ಪುನರ್ವಸತಿ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
ಡಿಸಿಎಂ ಡಿ.ಕೆ. ಶಿವಕುಮಾರ್
ಆಲಮಟ್ಟಿ ಜಲಾಶಯ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನವನಗರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದೆ. ನವನಗರದ ಯುನಿಟ್-3ರಲ್ಲಿ ಗುರುತಿಸಲಾಗಿದ್ದ 200 ಎಕರೆ ವಿಸ್ತೀರ್ಣದ ವಸತಿ ನಿವೇಶನಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಭೂಪರಿವರ್ತನೆ ಮಾಡಲು ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಪಿ.ಹೆಚ್. ಪೂಜಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಳುಗಡೆ ಸಂತ್ರಸ್ತರಾದ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ಪುನರ್ವಸತಿ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಈ ಸಂಬಂಧ ಪರಿಷ್ಕೃತ ನಕ್ಷೆಗೆ ಅನುಮೋದನೆ ಕೋರಿ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಸ್ತುತ ಈ ಪ್ರಸ್ತಾವನೆಯು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯ್ದೆಯ ಅನ್ವಯ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರಿಶೀಲನಾ ಹಂತದಲ್ಲಿದೆ. ಪ್ರಾಧಿಕಾರದಿಂದ ಅಂತಿಮ ಅನುಮೋದನೆ ದೊರೆತ ನಂತರವೇ ನಿಯಮಾನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಸ್ಪಷ್ಟಪಡಿಸಿದರು.