Bangalore Stampede | ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಲಾಗಿದ್ದ 10 ಲಕ್ಷ ರೂ. ಪರಿಹಾರ ಮೊತ್ತವನ್ನು 25 ಲಕ್ಷ ರೂ.ಗಳಿಗೆ ಹೆಚ್ಚಿಸಿ ಸರಕಾರ ಆದೇಶಿಸಿದೆ.;
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.
ಮೃತರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಘಟನೆಗೆ ಸಂಬಂಧಿಸಿ ತ್ವರಿತವಾಗಿ ತನಿಖೆ ಪೂರ್ಣಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ನಡೆಯುತ್ತಿದ್ದ ಚಾಮರಾಜನಗರ ಆಕ್ಸಿಜನ್ ದುರಂತ ಕುರಿತ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಯನ್ನು ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಿ ಜೂ.5 ರಂದು ಅಧಿಸೂಚನೆ ಹೊರಡಿಸಿದೆ. ಘಟನೆಗೆ ಸಂಬಂಧಿಸಿ ಒಂದು ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಮೈಕಲ್ ಡಿ.ಕುನ್ಹಾ ನೇತೃತ್ವದ ವಿಚಾರಣಾ ಆಯೋಗವು ಆಕ್ಸಿಜನ್ ದುರಂತ ಹಾಗೂ ಕೋವಿಡ್ ಅವ್ಯವಹಾರಗಳ ತನಿಖೆ ನಡೆಸುತ್ತಿದ್ದು ಈಗ, ಕಾಲ್ತುಳಿತ ಘಟನೆಯ ತನಿಖೆ ತುರ್ತಾಗಿರುವುದರಿಂದ ಚಾಮರಾಜನಗರ ಆಕ್ಸಿಜನ್ ದುರಂತದ ವಿಚಾರಣಾ ಅವಧಿಯನ್ನು ಆ.1 ರಿಂದ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಕೋವಿಡ್ ಅವಧಿಯಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ಪೂರೈಕೆ ಹಾಗೂ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತಂತೆ 2021ರ ಜುಲೈ- ಆಗಸ್ಟ್ ತಿಂಗಳಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ವರದಿ ಆರೋಪಗಳ ತನಿಖೆ ನಡೆಸಲು ಜಾನ್ ಮೈಕಲ್ ಡಿ.ಕುನ್ನಾ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿತ್ತು. ಅಲ್ಲದೇ 3 ತಿಂಗಳೊಳಗೆ ವರದಿ ಸಲ್ಲಿಸಲು 2023ಆ.25 ರಂದು ಅಧಿಸೂಚನೆ ಹೊರಡಿಸಿತ್ತು. ಅ.7 ರ ಅಧಿಸೂಚನೆಯಲ್ಲಿ ವಿಚಾರಣಾ ಆಯೋಗಕ್ಕೆ ನಿಯಮಗಳನ್ನು ನಿಗದಿಪಡಿಸಿತ್ತು. ವಿಚಾರಣಾ ಆಯೋಗದ ಅವಧಿಯನ್ನು 2025 ಡಿ.31 ರವರೆಗೆ ವಿಸ್ತರಿಸಲಾಗಿತ್ತು.
ಕಾಲ್ತುಳಿತ ಘಟನೆಯ ತನಿಖೆಗೆ ಮೊದಲ ಆದ್ಯತೆ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ತುರ್ತಾಗಿರುವುದರಿಂದ ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಮೊದಲ ಆದ್ಯತೆ ನೀಡಬೇಕಾಗಿರುವುದರಿಂದ ಚಾಮರಾಜನಗರ ಆಕ್ಸಿಜನ್ ದುರಂತದ ತನಿಖಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆ, ಸಿಐಡಿ ತನಿಖೆ ನಡೆಯುತ್ತಿದೆ. ಅಲ್ಲದೇ ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮುಜುಗರದಿಂದ ಪಾರಾಗಲು ಸರ್ಕಸ್
ಕಾಲ್ತುಳಿತ ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರವು ಅದರಿಂದ ಪಾರಾಗಲು ಅಧಿಕಾರಿಗಳ ಅಮಾನತು, ಆಯೋಜಕರ ವಿರುದ್ಧ ಕ್ರಮ ಕೈಗೊಂಡಿದೆ. ಈ ಮಧ್ಯೆ ಸಿಎಂ ಆಪ್ತರಾಗಿರುವ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.
ಈ ಮಧ್ಯೆ, ಘಟನೆಗೆ ನೈತಿಕ ಹೊಣೆ ಹೊತ್ತು ಕೆಎಸ್ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿ ಈಗಾಗಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ನಡೆಯುತ್ತಿರುವ ಮ್ಯಾಜಿಸ್ಟೀರಿಯಲ್ ತನಿಖೆ ಚುರುಕು ಪಡೆದುಕೊಂಡಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.
ಮೃತರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ಕಾರಣ, ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ವಿಜಯೋತ್ಸವದ ಕಾರ್ಯಕ್ರಮ ಆಯೋಜಿಸುವ ಮುನ್ನ ಸರ್ಕಾರ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ ಸರ್ಕಾರ ತರಾತುರಿಯಲ್ಲಿ ನಿರ್ಧಾರ ಮಾಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಈಗ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಜವಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದರು.
ಆರ್ಸಿಬಿ ಟ್ರೋಫಿ ಜಯಿಸಿದ ಮಂಗಳವಾರ(ಜೂ.3) ದ ರಾತ್ರಿಯಿಂದಲೇ ಜನರು ಸಂಭ್ರಮಾಚರಣೆ ಮಾಡಲು ಆರಂಭಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸಿ ವಿಜಯೋತ್ಸವ ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಮಾಡಬೇಕಿತ್ತು. ಕಾರ್ಯಕ್ರಮ ಮಾಡುತ್ತೇವೆ ಭಾಗವಹಿಸಿ ಎಂದು ಸರ್ಕಾರವೇ ಆಹ್ವಾನ ನೀಡಿ ಸಾರ್ವಜನಿಕರಿಗೆ ಸೂಕ್ತ ಭದ್ರತೆ ನೀಡದೆ ಜವಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ದುರಂತ ನಡೆದ ಸ್ಥಳದಲ್ಲಿ ಅಂಬ್ಯಲೆನ್ಸ್, ಅಗ್ನಿಶಾಮಕ ವಾಹನಗಳು ಇರಲಿಲ್ಲ. ಕೇವಲ ಮೂರು ಕೆಎಸ್ಆರ್ಪಿ ಬಸ್ನಲ್ಲಿನ ಸಿಬ್ಬಂದಿಗಳಿಂದ ಎಷ್ಟು ಭದ್ರತೆ ನೀಡಲು ಸಾಧ್ಯ. ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಮಾಡಲು ಆಗುವುದಿಲ್ಲ ಎಂದು ತಿಳಿಸಿದ್ದರೂ ತರಾತುರಿಯಲ್ಲಿ ಆಯೋಜಿಸುವುದು ಬೇಕಿರಲಿಲ್ಲ. ರಾಜ್ಯ ಹಾಗೂ ರಾಷ್ಟ್ರೀಯ ತಂಡಗಳು ಟ್ರೋಫಿ ಜಯಿಸಿದ್ದರೆ ಸಮಾರಂಭ ಮಾಡಬಹುದಿತ್ತು. ಕ್ಲಬ್ ತಂಡವಾಗಿರುವ ಆರ್ಸಿಬಿ ಗೆಲುವು ಸಂಭ್ರಮಿಸುವ ಅಗತ್ಯವಿರಲಿಲ್ಲ ಎಂದರು.
ಕಾಲ್ತುಳಿತ ದುರಂತಕ್ಕೆ ಸಂಬಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದು ಘಟನೆ ಕುರಿತು ಕೆಎಸ್ಸಿಎ ಅಧ್ಯಕ್ಷರು ಹಾಗೂ ಸಿಬ್ಬಂದಿ ಬಳಿ ಮಾಹಿತಿ ಪಡೆದಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದು ಬುಧವಾರ(ಜೂ.4) ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಮಾಹಿತಿ ಕಲೆಹಾಕಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಎಲ್ಲಾ ಮಾಹಿತಿಯನ್ನು ಸಿಐಡಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನವಾಗಿರುವ ಆರ್ಸಿಬಿ ಆಡಳಿತ ಮಂಡಳಿ ಹಾಗೂ ಡಿಎನ್ಎ ಸಂಸ್ಥೆಯ ಆರೋಪಿಗಳನ್ನು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಾಲ್ತುಳಿತ ದುರಂತದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕೈಗೆ ರಕ್ತ ಅಂಟಿಕೊಂಡಿದೆ. ಸರ್ಕಾರದ ತಪ್ಪಿದ್ದರೂ ಪ್ರಾಮಾಣಿಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರಕ್ಕೆ ಕಪ್ಪು ಚುಕ್ಕಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಒಲಂಪಿಕ್ಸ್ನಲ್ಲಿ ಹಲವರು ಗೆದ್ದಾಗ ಸಂಭ್ರಮಾಚರಣೆಗೆ ಮಾಡಲಿಲ್ಲ, ಆದರೆ ಆರ್ಸಿಬಿ ತಂಡ ಗೆದ್ದಾಗ ಸಂಭ್ರಮಾಚರಣೆ ಮಾಡಿದ್ದೀರಿ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕೇವಲ 25 ರಿಂದ 30 ವ್ಯಕ್ತಿಗಳು ಆಸೀನರಾಗಲು ವ್ಯವಸ್ಥೆ ಮಾಡಬೇಕು ಎಂದು ಸ್ಪಷ್ಟವಾಗಿ ಹೇಳಿದ್ದರೂ ಸಚಿವ ಜಮೀರ್ ಅಹ್ಮದ್ ಖಾನ್, ರಾಮಲಿಂಗಾರೆಡ್ಡಿ ಸೇರಿದಂತೆ ಮಂತ್ರಿಗಳ ಪರಿವಾರ ವೇದಿಕೆ ಮೇಲಿದ್ದರು ಎಂದರು.
ಸಂಜೆ 4 ಗಂಟೆಗೆ ವಿಧಾನಸೌಧದ ಕಾರ್ಯಕ್ರಮ ಶುರುವಾಗಿತ್ತು. ಅದಕ್ಕೂ ಮುನ್ನ ಕ್ರೀಡಾಂಗಣದ ಬಳಿ ಲಕ್ಷಾಂತರ ಜನ ಸೇರಿದ್ದು ಗುಪ್ತಚರ ವರದಿ ಬಂದಿರಲಿಲ್ಲವೇ ? ಮೆಟ್ರೋದಲ್ಲಿ 9 ಲಕ್ಷ ಜನ ಪ್ರಯಾಣಿಸಿದ್ದಾರೆ ಈ ಬಗ್ಗೆ ಯಾಕೆ ಮಾಹಿತಿ ಪಡೆಯಲಿಲ್ಲ. ಕಾಲ್ತುಳಿತ ದುರಂತದಲ್ಲಿ ನನ್ನ ಕ್ಷೇತ್ರದ ಎಂಟೆಕ್ ವಿದ್ಯಾರ್ಥಿ ಮೃತಪಟ್ಟಿದ್ದು ಅವರ ಕುಟುಂಬ ಖಿನ್ನತೆಗೆ ಒಳಗಾಗಿದೆ. ಸರ್ಕಾರ ಹೆಣದ ಮೇಲೆ ಸಂಭ್ರಮಾಚರಣೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಆರ್ಸಿಬಿ ಆಟಗಾರರನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನಿಸಲು ಹಾಗೂ ಕ್ರೀಡಾಂಗಣದ ಬಳಿ ವಿಜಯೋತ್ಸವ ಆಚರಿಸಲು ಅಂದಾಜು 15 ಕೋಟಿ ರೂ. ಖರ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಐಪಿಎಲ್ ಇವೆಂಟ್ ಮ್ಯಾನೆಜ್ಮೆಂಟ್ ಜವಾಬ್ದಾರಿ ಹೊಂದಿದ್ದ ಡಿಎನ್ಎ ಸಂಸ್ಥೆ ವಿಜಯೋತ್ಸವದ ಉಸ್ತುವಾರಿ ವಹಿಸಿಕೊಂಡಿತ್ತು. ಕಾರ್ಯಕ್ರಮವನ್ನು ಬುಧವಾರ(ಜೂನ್.4) ಬಿಟ್ಟು ಶನಿವಾರ ಮಾಡಬೇಕು ಎಂದು ನಿರ್ಧಿರಿಸಲಾಗಿತ್ತು. ಆದರೆ ಕೆಲವು ಸಚಿವರು ಹಾಗೂ ಅಧಿಕಾರಿಗಳ ಒತ್ತಡದಿಂದಾಗಿ ಬುಧವಾರವೇ ಕಾರ್ಯಕ್ರಮ ಆಯೋಜಿಸಿದ್ದರಿಂದ ಅಭಿಮಾನಿಗಳನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಯೋಚಿಸುವಲ್ಲಿ ಸರ್ಕಾರ ಹಾಗೂ ಡಿಎನ್ಎ ಸಂಸ್ಥೆ ಎಡವಿದೆ ಎನ್ನಲಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಕಾಲ್ತುಳಿತ ಪ್ರಕರಣ ಆಕಸ್ಮಿಕ ಘಟನೆ, ಸಾವು - ನೋವುಗಳಾಗಿರುವುದು ದುಃಖ ತಂದಿದೆ. ವಿಪಕ್ಷಳು ಸಾವಿನಲ್ಲಿ ರಾಜಕೀಯ ಮಾಡಬಾರದು ಎಂದರು.
ನಿರೀಕ್ಷೆಗಿಂತ ಹೆಚ್ಚು ಜನರು ಬಂದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಈಗಾಗಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಹಲ್ಗಾಮ್ ಹಾಗೂ ಕುಂಭಮೇಳದಲ್ಲಿ ನಡೆದ ಘಟನೆಗೆ ಕಾರಣ ಯಾರು ? ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ರಾಜೀನಾಮೆ ನೀಡಿದ್ದಾರೆಯೆ ಎಂದು ಪ್ರಶ್ನಿಸಿದರು.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಅಧಿಕಾರಿಗಳನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ನ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ.
‘ಆರ್ಸಿಬಿ ಗೆಲುವು ಸಾಧಿಸಿದ ರಾತ್ರಿ ರಾಜ್ಯಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಮಾಲ್ಗಳು ಹಾಗೂ ಬೀದಿಗಳಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಆಗ ಒಂದೇ ಒಂದು ಅಹಿತಕರ ಘಟನೆಯೂ ನಡೆದಿರಲಿಲ್ಲ. ಕಾಲ್ತುಳಿತ ಸುಮ್ಮನೆ ಸಂಭವಿಸಿಲ್ಲ. ಅದನ್ನು ಸೃಷ್ಟಿ ಮಾಡಲಾಗುತ್ತದೆ. ರಾಜ್ಯ ಸರ್ಕಾರ, ಅಧಿಕಾರಿಗಳು, ಆರ್ಸಿಬಿ, ಪೊಲೀಸರು, ಕೆಎಸ್ಸಿಎ ಮತ್ತು ಸಾರ್ವಜನಿಕರ ಸಾಮೂಹಿಕ ವೈಫಲ್ಯದಿಂದ ಕಾಲ್ತುಳಿತ ದುರಂತ ಸಂಭವಿಸಿದೆʼ ಎಂದು ರಮ್ಯಾ ಹೇಳಿದ್ದಾರೆ.
‘ಗೆಲುವನ್ನು ಸಂಭ್ರಮಿಸಲು ಬಂದ ಮುಗ್ಧರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಈ ಸಾವಿಗೆ ಕಾರಣ ಪತ್ತೆ ಮಾಡಿ, ನ್ಯಾಯ ಒದಗಿಸಲು ಪ್ರಾಮಾಣಿಕ ಆತ್ಮಾವಲೋಕನ ಅಗತ್ಯವಿದೆ. ಇಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಿದ ನಿರ್ಧಾರವು ಯೋಚಿಸದೇ ತೆಗೆದುಕೊಂಡ ಕ್ರಮದಂತೆ ಕಾಣುತ್ತದೆ. ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳುವ ಮೊದಲು ತನಿಖಾ ವರದಿಗಾಗಿ ಕಾಯಬೇಕಿತ್ತು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಕಾರ್ಯದರ್ಶಿ ಎ. ಶಂಕರ್ ಮತ್ತು ಖಜಾಂಚಿ ಜೈರಾಮ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ, "ತಮ್ಮ ಪಾತ್ರ ಬಹಳ ಸೀಮಿತವಾಗಿದ್ದರೂ ದುರಂತಕ್ಕೆ ತಾವು ನೈತಿಕ ಹೊಣೆಗಾರಿಕೆ ಹೊಂದಿದ್ದೇವೆ" ಎಂದು ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ. ನೈತಿಕ ಜವಾಬ್ದಾರಿಯಿಂದ ತಾವು ಶುಕ್ರವಾರ ರಾತ್ರಿ ಕೆಎಸ್ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಪತ್ರವನ್ನು ಜೂನ್ 6ರಂದು ಕೆಎಸ್ಸಿಎ ಅಧ್ಯಕ್ಷರಿಗೆ ಬರೆಯಲಾಗಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆಗೊಳಿಸಿರುವ ಸರ್ಕಾರದ ನಿರ್ಧಾರ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಹೇಳಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಗೋವಿಂದರಾಜು ಅವರಿಂದ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಯಾವುದೇ ಲಾಭವಿಲ್ಲದ ಕಾರಣ ಅವರನ್ನು ಈ ಹುದ್ದೆಯಿಂದ ಬಿಡುಗಡೆಗೊಳಿಸಬೇಕಿತ್ತು ಎಂದಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಸುತ್ತಲಿನ "ಶನಿಸಂತಾನ"ಗಳನ್ನು ದೂರವಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.