ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹ: 8 ಸೇತುವೆಗಳು ಜಲಾವೃತ, 18 ಗ್ರಾಮಗಳಿಗೆ ಸಂಪರ್ಕ ಕಡಿತ
ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡಿದೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಮಲ್ಲಿಕವಾಡ-ದತ್ತವಾಡ ಸೇತುವೆ ಜಲಾವೃತಗೊಂಡಿದೆ.;
ಸಾಂದರ್ಭಿಕ ಚಿತ್ರ
ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬೆಳಗಾವಿಯ ಐದು ನದಿಗಳಾದ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ, ಮತ್ತು ದೂಧಗಂಗಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ ಚಿಕ್ಕೋಡಿ ತಾಲೂಕಿನಲ್ಲಿ 8 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದ್ದು, 18 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿದೆ.
ಪ್ರವಾಹದಿಂದ ದೂಧಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರ ಪರಿಣಾಮವಾಗಿ ಮುಲ್ಲಾನಕಿ ಗ್ರಾಮದ ಹಜರತ್ ಮನ್ಸೂರ್ ಅಲಿ ದರ್ಗಾ ಮುಳುಗಿದೆ. ನದಿ ಪಾತ್ರದ ಪಂಪ್ಸೆಟ್ಗಳು ಮತ್ತು ಮೋಟಾರ್ಗಳು ಸಹ ಕೊಚ್ಚಿ ಹೋಗಿವೆ.
ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡಿದೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಮಲ್ಲಿಕವಾಡ-ದತ್ತವಾಡ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಕ್ಸಂಬಾ-ದತ್ತವಾಡ, ಕಲ್ಲೋಳ-ಯಡೂರ ಮತ್ತು ಬಾವನಸೌದತ್ತಿ-ಮಾಂಜರಿ ಸೇತುವೆ ಮುಳುಗಡೆಯಾಗಿದೆ.
ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಗೆ ಅಡ್ಡಲಾಗಿ ಕಟ್ಟಿರುವ ಮಲಿಕವಾಡ-ದತ್ತವಾಡ ಸೇತುವೆ ಎರಡೇ ತಿಂಗಳಲ್ಲಿ ಆರನೇ ಬಾರಿಗೆ ಮುಳುಗಡೆಯಾಗಿದೆ. ತುಂಬಿ ಹರಿಯುತ್ತಿರುವ ದೂದಗಂಗಾ ನದಿಗೆ ಮಹಿಳೆಯರು ಪೂಜೆ ಸಲ್ಲಿಸಿದರು.
ಮುಳುಗಡೆಯಾದ ದರ್ಗಾ
ಚಿಕ್ಕೋಡಿ ತಾಲೂಕಿನ ಮುಲ್ಲಾನಕಿ ಗ್ರಾಮದಲ್ಲಿರುವ ಹಜರತ್ ಮನ್ಸೂರ್ ಅಲಿ ದರ್ಗಾ ದೂದಗಂಗಾ ನದಿಯಲ್ಲಿ ಮುಳುಗಡೆಯಾಗಿದೆ. ಏಕಾಏಕಿ ನೀರು ಏರಿಕೆಯಾಗಿದ್ದರಿಂದ ನದಿ ಪಕ್ಕದ ಪಂಪ್ ಸೆಟ್, ಮೋಟರ್ಗಳು ಕೊಚ್ಚಿಕೊಂಡು ಹೋಗುತ್ತಿವೆ. ದೂದಗಂಗಾ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.
ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಸವದತ್ತಿ ಹೊರ ವಲಯದಲ್ಲಿರುವ ನವಿಲುತೀರ್ಥ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದ 10ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಮಲಪ್ರಭಾ ಡ್ಯಾಂ ನಲ್ಲಿ 2078.75ನೀರು ಸಂಗ್ರಹವಾಗಿದೆ. ಜಲಾಶಯ 2079.50 ಸಾಮರ್ಥ್ಯ ಹೊಂದಿದೆ. ಮಲಪ್ರಭಾ ನದಿ ಪಾತ್ರದ ಜನರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳದಲ್ಲಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.