Bangalore Stampede | ಸಂಪುಟದಲ್ಲಿ ಜನದಟ್ಟಣೆ ನಿಯಂತ್ರಣ ವಿಧೇಯಕ ಪ್ರಸ್ತಾಪ
ಜನಸಂದಣಿ ನಿಯಂತ್ರಣಕ್ಕೆ ಜೊತೆಗೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣಗಳನ್ನು ತಡೆಗಟ್ಟಲು ಸಹ ವಿಧೇಯಕ ಜಾರಿಗೆ ಸಂಪುಟ ನಿರ್ಧರಿಸಿದೆ.;
ಐಪಿಎಲ್ ಪಂದ್ಯದಲ್ಲಿ ಚೊಚ್ಚಲ ಗೆಲುವು ಸಾಧಿಸಿದ ಆರ್ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಜನಸಂದಣಿ ನಿಯಂತ್ರಣ ಕೈಗೊಳ್ಳುವ ನಿಟ್ಟಿನಲ್ಲಿ ಮಹತ್ವದ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪಿಸಲಾಗಿದೆ.
ಕರ್ನಾಟಕ ಜನಸಂದಣಿ ನಿಯಂತ್ರಣ ಮತ್ತು ಜನಸಮೂಹ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕ ಕುರಿತು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಆದರೆ ಸಭೆಯಲ್ಲಿ ವಿಧೇಯಕಗಳ ಕುರಿತು ಚರ್ಚೆ ನಡೆದಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪ್ರಮುಖ ಕಾರಣ ಜನಸಂದಣೆ ನಿಯಂತ್ರಣ ಮಾಡುವಲ್ಲಿ ವೈಫಲ್ಯವಾಗಿದೆ. ಅಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸೇರಿದ ಜನಸಂದಣಿಯನ್ನು ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿತ್ತು. ಘಟನೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿತ್ತು. ಮುಂದಿನ ದಿನದಲ್ಲಿ ಇಂತಹ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಜನಸಂದಣಿ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ರೂಪಿಸಲು ತೀರ್ಮಾನಿಸಲಾಗಿತ್ತು. ಅಂತೆಯೇ ವಿಧೇಯಕ ತರಲು ಮುಂದಾಗಿದೆ.
ಕಾನೂನು ಉಲ್ಲಂಘನೆ ಮಾಡುವವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಬಹುದಾದ ಅಂಶವನ್ನು ವಿಧೇಯಕದಲ್ಲಿ ಸೇರಿಸುವ ಪ್ರಸ್ತಾಪವಿದೆ.
ಇನ್ನು, ಸರ್ಕಾರವು ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣಗಳನ್ನು ತಡೆಗಟ್ಟಲುಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ ಜಾರಿಗೆ ತೀರ್ಮಾನಿಸಲಾಗಿದೆ. ಧರ್ಮ, ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಲಿಂಗ, ಗುರುತು, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಅಂಗವೈಕಲ್ಯ ಅಥವಾ ಬುಡಕಟ್ಟು ಮತ್ತು ಸಂಬಂಧಿತ ಅಸಹಿಷ್ಣುತೆಗೆ ಸಂಬಂಧಿಸಿದ ದ್ವೇಷದ ಅಪರಾಧಗಳು ಮತ್ತು ದ್ವೇಷ ಭಾಷಣಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಅಶಾಂತಿ ತಲೆದೋರುವ ಘಟನೆಗಳು ನಡೆದ ಕಾರಣ ಸರ್ಕಾರವು ಮುಂದಿನ ದಿನದಲ್ಲಿ ಇಂತಹ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳು ಸುಳ್ಳು ಮಾಹಿತಿ, ಸುಳ್ಳು ಸುದ್ದಿ ನಿಯಂತ್ರಣ ವಿಧೇಯಕ ಜಾರಿಗೆ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳ ಕುರಿತು ಪ್ರಸ್ತಾಪವಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಜೈಲು ಶಿಕ್ಷೆ, ದಂಡ ವಿಧಿಸುವಂತಹ ನಿಯಮಗಳನ್ನು ವಿಧೇಯಕದಲ್ಲಿ ಸೇರಿಸಲಾಗುತ್ತದೆ ಎಂದು ಹೇಳಲಾಗಿದೆ.