Save Lalbagh|ಟನಲ್ ರಸ್ತೆಯಲ್ಲಿ ಬೈಕ್, ಬಸ್ ಸಂಚಾರಕ್ಕೂ ಅವಕಾಶ; ಯೋಜನೆಗೆ ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತ- ಸಿಎಂ
ಟನಲ್ ಯೋಜನೆಯನ್ನು ಕಾರು, ಬಸ್,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಿಎಂ ಸಿದ್ದರಾಮಯ್ಯ
ಬೆಂಗಳೂರು ಟನಲ್ ರಸ್ತೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ನಡೆಯನ್ನು ಸಮರ್ಥಿಸಿಕೊಂಡು, ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಟನಲ್ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರು ರಾಜಕೀಯ ಉದ್ದೇಶದಿಂದ ಯೋಜನೆ ವಿರೋಧಿಸುತ್ತಿದ್ದಾರೆ. ಯೋಜನೆ ಬಗ್ಗೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಹೇಳಿದರು.
ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು?, ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದರು.
ಬೈಕ್, ಬಸ್ ಗಳಿಗೂ ಟನಲ್ ರಸ್ತೆಯಲ್ಲಿ ಅವಕಾಶ
ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಟನಲ್ ಯೋಜನೆಯನ್ನು ಕಾರು, ಬಸ್,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಟನಲ್ ರಸ್ತೆಯಲ್ಲಿ ಕಾರುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಹೇಳಲಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಕಾರುಗಳ ಸಂಚಾರಕ್ಕಾಗಿ ಮಾತ್ರ ಟನಲ್ ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಒಟ್ಟು 1.2 ಕೋಟಿ ವಾಹನಗಳಿದ್ದು, ಇಪ್ಪತ್ತು ಲಕ್ಷ ಕಾರುಗಳಿವೆ. ಟನಲ್ ನಲ್ಲಿ ಕಿ.ಮೀ.ಗೆ 16 ರೂ ಟೋಲ್ ಶುಲ್ಕ ವಿಧಿಸುವುದರಿಂದ ಶ್ರೀಮಂತರಷ್ಟೇ ಸಂಚರಿಸಬಹುದು ಎಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಟನಲ್ ರಸ್ತೆ ಯೋಜನೆಗೆ ಇದೂ ಕೂಡ ಕಾರಣವಾಗಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯು ಯೋಜನೆ ಬಗ್ಗೆ ಇನ್ನಷ್ಟು ಗೊಂದಲ ಸೃಷ್ಟಿಸಿದೆ.