ಬಡವ, ರೈತ, ದಲಿತರ ಕಣ್ಣೀರು ಒರೆಸಿದ್ದೀರಾ; ಹಿಂದೂಗಳಲ್ಲಿ ಬಡವರಿಲ್ಲವೇ? ಸಿ.ಎಂ ವಿರುದ್ದ ವಿಜಯೇಂದ್ರ ಟೀಕೆ

ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಳ್ಳಬೇಕೇ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.;

Update: 2025-04-17 10:43 GMT

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಿತು. 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ ತೀವ್ರ ಟೀಕೆ ಮಾಡಿದ್ದು, ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. 

ಬಾಗಲಕೋಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಅವರು ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದರು. ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಳ್ಳಬೇಕೇ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‌ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ?  ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದರು.

ಹಿಂದೂಗಳಲ್ಲಿ ಬಡವರಿಲ್ಲವೇ?

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಇದು ಯಾರಪ್ಪನ ದುಡ್ಡು, ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಾಗಿದ್ದರೆ ಹಿಂದೂಗಳಲ್ಲಿ ಬಡವರಿಲ್ಲವೇ? ಹಿಂದೂಗಳಿಗೆ ಏಕೆ ಅಪಮಾನ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಕೆ

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ. 50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಆಕ್ಷೇಪಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಗದ್ದೀಗೌಡರ್, ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ. ಭಾಂಡಗೆ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ಪಿ.ಹೆಚ್. ಪೂಜಾರ, ಶಾಸಕ ಜಗದೀಶ್ ಗುಡಗಂಟಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಜಿ. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಎ.ಹೆಚ್. ಪಾಟೀಲ್ ನಡಹಳ್ಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಾಗಲಕೋಟೆ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags:    

Similar News