ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ ತಲಾ 10 ಲಕ್ಷ ರೂ. ಪುರಸ್ಕಾರ ; ಸಿಎಂ ಘೋಷಣೆ
ಬಾನು ಮುಷ್ತಾಕ್ ಅವರ ಕತೆಗಳನ್ನು ಇಂಗ್ಲಿಷ್ಗೆ ಅನುವಾದಿಸಿ, ಮುದ್ರಿಸಲು ಸರ್ಕಾರ ಅಗತ್ಯ ನೆರವು ನೀಡಲಿದೆ. ಕನ್ನಡದ ಭಾಷೆಗೆ ಜಾಗತಿಕ ಮನ್ನಣೆ ತಂದುಕೊಟ್ಟ ಬಾನು ಮುಷ್ತಾಕ್ ಹಾಗೂ ದೀಪಾ ಬಾಸ್ತಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮ ಹೇಳಿದರು.;
ಬೂಕರ್ ಪ್ರಶಸ್ತಿ ಗೆಲ್ಲುವ ಮೂಲಕ ಕನ್ನಡ ಭಾಷೆಗೆ ಜಾಗತಿಕ ಮನ್ನಣೆ ತಂದುಕೊಟ್ಟಿರುವ ಲೇಖಕಿ ಬಾನು ಮುಷ್ತಾಕ್ ಹಾಗೂ ಅನುವಾದಕಿ ದೀಪಾ ಬಾಸ್ತಿ ಅವರಿಗೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂ. ಪುರಸ್ಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು. ದೀಪಾ ಬಾಸ್ತಿ ಅವರು ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆಪಡುವ ವಿಚಾರ ಎಂದು ಹೇಳಿದರು.
ಇಂಗ್ಲಿಷ್ ಅನುವಾದಕ್ಕೆ ನೆರವು
ಬಾನು ಮುಷ್ತಾಕ್ ಅವರ ಕತೆಗಳನ್ನು ಇಂಗ್ಲಿಷ್ಗೆ ಅನುವಾದಿಸಿ, ಮುದ್ರಿಸಲು ಸರ್ಕಾರ ಅಗತ್ಯ ನೆರವು ನೀಡಲಿದೆ. ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ಸಿಎಂ ಸಿದ್ದರಾಮಯ್ಯ ವಿಶ್ಲೇಷಿಸಿದರು.
ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಬಾನು ಮುಷ್ತಾಕ್ ಅವರಿಗೆ ಲಭಿಸಿವೆ. ಇದು ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವವಿದೆ ಎಂಬುದಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟರು.
ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಮುಷ್ತಾಕ್ ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಅವರು ನಿರ್ವಹಿಸಿದ್ದಾರೆ. ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ. ಬಸವಣ್ಣನವರು "ಇವ ನಮ್ಮವ" ಎಂದಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆ ಭಾಗವಾಗಿ ಬಾನು ಮುಷ್ತಾಕ್ ಅವರು ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಲೇಖಕಿ ಬಾನು ಮುಷ್ತಾಕ್ ಮಾತನಾಡಿ, ಕನ್ನಡದಷ್ಟು ಸಹಿಷ್ಣುತೆ ಇರುವ ಭಾಷೆ ಇಲ್ಲಿಯವರೆಗೂ ನೋಡಿಲ್ಲ. ಕರ್ನಾಟಕದ ಕರ್ಮಭೂಮಿ ನನ್ನ ಸೃಜನಶೀಲತೆಗೆ ಪ್ರೇರಣೆ ನೀಡಿದೆ. ನಾನು ಇಲ್ಲಿ ನಿಂತಿರುವುದಕ್ಕೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ಬೂಕರ್ ಪ್ರಶಸ್ತಿ ಗೆಲ್ಲುವುದು ನನ್ನ ಕಸನಾಗಿತ್ತು ಎಂದು ಹೇಳಿದರು.
ಉತ್ತರ ಭಾರತದ ಮಾಧ್ಯಮಗಳ ಸಂದರ್ಶನದಲ್ಲಿ ನಾನು ಹಿಂದಿ ಮಾತನಾಡಿದಾಗ, ನೀವು ಹಿಂದಿಯಲ್ಲಿ ಮಾತನಾಡಿದ್ದೀರಾ, ಈಗ ಕರ್ನಾಟಕಕಕ್ಕೆ ಹೋಗಬಹುದಾ ಎಂದು ಕೇಳಿದರು, ನಾನು ಅವರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದೇನೆ ಎಂದರು.
ಕರ್ನಾಟಕ ಎಂದಿಗೂ ಸೃಜನಶೀಲತೆಯ ತಾಣವಾಗಿದೆ. ನಾವೆಲ್ಲರೂ ಬರೆಯೋಣ, ಓದೋಣ. ಸರ್ಕಾರವು ಅನುವಾದಕ್ಕೆ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು.