ಭ್ರಷ್ಟಾಚಾರಕ್ಕೆ ಸಿಎಂ ಕುಮ್ಮಕ್ಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡ್‌ನ ಎಟಿಎಂ ಆಗಿ ಸರ್ಕಾರವನ್ನು ಪರಿವರ್ತನೆಗೊಳಿಸಿದೆ ಎಂದು ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.;

Update: 2025-06-21 04:31 GMT

ವಿಜಯೇಂದ್ರ

ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಎಲ್ಲರೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುದಕ್ಕೆ ಶಾಸಕ ಬಿ.ಆರ್. ಪಾಟೀಲ್ ಅವರ ಆಡಿಯೋ ಸಣ್ಣ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರವನ್ನು ಹೈಕಮಾಂಡ್‌ನ "ಎಟಿಎಂ" ಆಗಿ ಪರಿವರ್ತಿಸಿದೆ ಎಂದು ಆರೋಪಿಸಿದರು.

 ಶೇ.100 ಭ್ರಷ್ಟಾಚಾರ 

"ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದರು. ಇಂದು ಜನಸಾಮಾನ್ಯರು, ಉದ್ಯಮಿಗಳು ಸೇರಿದಂತೆ ಯಾರನ್ನೇ ಕೇಳಿದರೂ ಶೇ. 100 ಭ್ರಷ್ಟಾಚಾರ ನಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ" ಎಂದು ವಿಜಯೇಂದ್ರ ಹೇಳಿದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವುದನ್ನು ಸ್ವತಃ ಆಡಳಿತ ಪಕ್ಷದ ಶಾಸಕರೇ ಬಹಿರಂಗಪಡಿಸಿದ್ದಾರೆ. "ಯಾವುದೇ ಇಲಾಖೆಗೆ ಹೋದರೂ ಲಂಚವಿಲ್ಲದೆ ಕೆಲಸಗಳು ಆಗುತ್ತಿಲ್ಲ. ಈ ವಿಷಯದಲ್ಲಿ ಜನರು ಸರ್ಕಾರದ ಬಗ್ಗೆ ಬೇಸತ್ತಿದ್ದಾರೆ" ಎಂದು ಅವರು ತಿಳಿಸಿದರು.

ಭಾಗ್ಯಲಕ್ಷ್ಮೀ ಯೋಜನೆ ನಿಲ್ಲಿಸಿದ್ದಕ್ಕೆ ಆಕ್ರೋಶ

ಬಡ ಕುಟುಂಬಗಳಲ್ಲಿ ಹೆಣ್ಣುಮಕ್ಕಳು ಹುಟ್ಟುವುದೇ ಶಾಪ ಎನ್ನುತ್ತಿದ್ದ ಕಾಲದಲ್ಲಿ ಯಡಿಯೂರಪ್ಪ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆ ನೀಡುವುದರ ಮೂಲಕ ವರವನ್ನಾಗಿ ಪರಿಣಮಿಸಿತು ಎಂದು ವಿಜಯೇಂದ್ರ ಸ್ಮರಿಸಿದರು. "36 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಆದರೆ, ಸಿದ್ದರಾಮಯ್ಯ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿ ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದೆ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 

Tags:    

Similar News