Cabinet Meeting | ಮಾವು ಬೆಳೆಗೆ ಬೆಂಬಲ ಬೆಲೆ ಸದ್ಯಕ್ಕಿಲ್ಲ; ಬೆಳೆ ಸಮೀಕ್ಷೆ ನಂತರ ನಿರ್ಧಾರ

ಆಂಧ್ರಪ್ರದೇಶ ಮಾದರಿಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಹಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.;

Update: 2025-06-19 09:07 GMT

ಕೋಲಾರ ಜಿಲ್ಲೆಯಲ್ಲಿ ತೀವ್ರ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಬೆಂಬಲ ಬೆಲೆ ಘೋಷಣೆಗೂ ಮುನ್ನ ಮಾವು ಬೆಳೆಯ ಸಮೀಕ್ಷೆ ನಡೆಸಲು ಸಚಿವ ಸಂಪುಟ ನಿರ್ಣಯಿಸಿದೆ. ಹಾಗಾಗಿ ಮಾವು ಬೆಳೆಗಾರರಿಗೆ ತಕ್ಷಣವೇ ಬೆಂಬಲ ಸಿಗುವುದು ಅನುಮಾನವಾಗಿದೆ.

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ಮೈಸೂರು ಭಾಗದಲ್ಲಿ ಮಾವು ಬೆಳೆಗಾರರಿಗೆ ಎದುರಾಗಿರುವ ಬೆಲೆ ಕುಸಿತದ ಸಂಕಷ್ಟದ ಕುಸಿತ ಚರ್ಚೆ ನಡೆಯಿತು.

ಆಂಧ್ರಪ್ರದೇಶದಲ್ಲಿ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಿರುವ ಅಲ್ಲಿನ ಸರ್ಕಾರ ಮಾವಿಗೆ ಬೆಂಬಲ ಬೆಲೆ ಘೋಷಿಸಿದೆ. ಅದೇ ರೀತಿ ರಾಜ್ಯದಲ್ಲಿ ಮಾವು ಬೆಳೆಗಾರರ ಹಿತ ಕಾಯಲು ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕು ಎಂದು ಹಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು ಎಂದು ತಿಳಿದು ಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಲು ಸರ್ಕಾರದ ತಕರಾರಿಲ್ಲ. ಆದರೆ, ಮೊದಲು ರಾಜ್ಯಾದ್ಯಂತ ಎಷ್ಟು ಬೆಳೆ ಇದೆ ಎಂದು ಸಮೀಕ್ಷೆ ಮಾಡೋಣ. ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ ನಂತರ ನಾವು ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ.

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ. ಪಾಟೀಲ್‌ ಅವರು, "ಮಾವು ಬೆಳೆಗಾರರ ವಿಚಾರವಾಗಿ ಮುಂಬೈ ಕರ್ನಾಟಕ ಭಾಗದವರು, ಕೋಲಾರದವರು ಪ್ರಸ್ತಾಪಿಸಿದ್ದಾರೆ. ಬೆಳೆ ಹಾನಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಬೆಂಬಲ ಬೆಲೆ ಪಡೆಯುವ ಸಂಬಂಧ ಕೇಂದ್ರದ ಜತೆ ಚರ್ಚಿಸಲು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ಸಿಎಂ ಸೂಚಿಸಿದ್ದಾರೆ. ಕೇಂದ್ರದಿಂದ ಪರಿಹಾರ ಕೋರಲು ತಾಕೀತು ಮಾಡಲಾಗಿದೆ" ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಭಾಗದಲ್ಲಿ ರಾಜ್ಯದ ಮಾವು ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚುಮಾವು ಬೆಳೆ ಬೆಳೆದಿದ್ದು, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಇದರಿಂದ ಬೆಳೆಗಾರರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.

ಚಿತ್ತೂರು ಜಿಲ್ಲೆಯಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಮಾವು ಸಂಸ್ಕರಣಾ ಘಟಕಗಳಿದ್ದು, ಪ್ರತಿ ವರ್ಷ ರಾಜ್ಯದ ಮಾವು ಬೆಳೆಗಾರರಿಗೆ ಬೆಳೆ ಖರೀದಿಸುತ್ತಿದ್ದರು. ಆದರೆ, ಈ ವರ್ಷ ಏಕಕಾಲದಲ್ಲಿ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕಲ್ಲಿ ಮಾವು ಇಳುವರಿ ಬಂದಿರುವುದರಿಂದ ಬೆಲೆ ಕುಸಿದಿದೆ.

Tags:    

Similar News