Elephant Attack | ಮೂರು ಪುಂಡಾನೆಗಳ ಸೆರೆ ಶೀಘ್ರ ಕಾರ್ಯಾಚರಣೆ; ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಆನೆಗಳನ್ನು ಸೆರೆ ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಆನೆ ಕಾರ್ಯಪಡೆಯ ಕಚೇರಿ ಆರಂಭಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸಲು ಆದೇಶಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.;

Update: 2025-03-15 10:40 GMT
ಈಶ್ವರ್‌ ಖಂಡ್ರೆ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ, ಕೋಗೋಡು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜನರಿಗೆ ಉಪಟಳ ನೀಡುತ್ತಿರುವ ಮೂರು ಪುಂಡಾನೆಗಳನ್ನು ಗುರುತಿಸಿದ್ದು, ಶೀಘ್ರವೇ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೇಲೂರು ತಾಲ್ಲೂಕಿನ ಕೋಗೋಡಿನ ಕಾಫಿ ತೋಟದಲ್ಲಿ ಶುಕ್ರವಾರ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ತಾಲ್ಲೂಕಿನಲ್ಲಿ 3 ಪುಂಡಾನೆಗಳು ತಿರುಗಾಡುತ್ತಿದ್ದು, ಅವುಗಳನ್ನು ಗುರುತಿಸಲಾಗಿದೆ. ಕೂಡಲೇ ಅವನ್ನು ಸೆರೆ ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಆನೆ ಕಾರ್ಯಪಡೆಯ ಕಚೇರಿ ಆರಂಭಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸಲು ಆದೇಶಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮೆರಾ ಹೊಂದಿರುವ ಡ್ರೋಣ್ ಖರೀದಿಸಿ ರಾತ್ರಿಯ ವೇಳೆಯೂ ಆನೆಗಳ ಸಂಚಾರದ ಬಗ್ಗೆ ನಿಗಾ ವಹಿಸಲಾಗುವುದು. ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆನೆ ಹಾವಳಿ ವ್ಯಾಪಕವಾಗಿರುವ ಪ್ರದೇಶದಲ್ಲಿ ತುರ್ತು ಕಾರ್ಯಾಚರಣೆಗಾಗಿ 2 ಹೆಚ್ಚುವರಿ ಜೀಪ್, ಹೆಚ್ಚಿನ ಸಿಬ್ಬಂದಿ ನಿಯೋಜಿಸಬೇಕು ಎಂದು ಹೇಳಿದ್ದಾರೆ.

ಸ್ಥಳೀಯರಿಗೆ ತರಬೇತಿ

ಬೇಲೂರು ಭಾಗದ ಸ್ಥಳೀಯರು, ತೋಟದ ಕಾರ್ಮಿಕರಿಗೆ ಆನೆಗಳ ಸ್ವಭಾವ, ಆನೆ ಬಂದಾಗ ವಹಿಸಬೇಕಾದ ಮುಂಜಾಗರೂಕ ಕ್ರಮ, ಹೇಗೆ ನಡೆದುಕೊಳ್ಳಬೇಕು, ಸಂಜೆ ಮತ್ತು ಬೆಳಗಿನ ವೇಳೆ ಓಡಾಡುವಾಗ ಕೈಗೊಳ್ಳಬೇಕಾದ ಎಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸಲಾಗುವುದು. ತೋಟದ ಮಾಲೀಕರ ಸಹಕಾರದೊಂದಿಗೆ ಗ್ರಾಮಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ, ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಇಟಿಎಫ್ ಸಿಬ್ಬಂದಿಗೆ ಅಗತ್ಯ ಸೌಲಭ್ಯ

ಹೊರಗುತ್ತಿಗೆ ಸಿಬ್ಬಂದಿಗೆ ಸಮರ್ಪಕ ವೇತನ, ಆನೆ ಕಾರ್ಯಪಡೆಯ ಸಿಬ್ಬಂದಿಗೆ ಆಹಾರಭತ್ಯೆ, ಸಮವಸ್ತ್ರ, ಶೂ, ಜಾಕೆಟ್ ಹಾಗೂ ವಿಮಾ ಸೌಲಭ್ಯ ನೀಡುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಮೊಬೈಲ್ ಸಿಗ್ನಲ್ ದೊರಕದ ಕಡೆಗಳಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಗೆ ವಾಕಿ ಟಾಕಿ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ತಾಕೀತು ಮಾಡಿದ್ದಾರೆ.

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Similar News