Caste Census | ಜಾತಿ ಸಮೀಕ್ಷೆ ಏಳು ಕೋಟಿ ಕನ್ನಡಿಗರ ಸಮೀಕ್ಷೆ; ಅ.18 ರಂದೇ ಸಂಪುಟ ಚರ್ಚೆ: ಸಿಎಂ

ಜಾತಿ ಗಣತಿ ವರದಿ ಜಾರಿ ಕುರಿತಂತೆ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

Update: 2024-10-07 10:44 GMT
ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಕೊಠಡಿಯಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅ.18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಆ ವರದಿಯ ಕುರಿತ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಶಾಸಕರುಗಳೊಂದಿಗೆ ವರದಿಯ ಕುರಿತು ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿರೋಧ ಪಕ್ಷಗಳ ಶಾಸಕರೂ ಸೇರಿದಂತೆ ಹಿಂದುಳಿದ ವರ್ಗಗಳ 30ಕ್ಕೂ ಹೆಚ್ಚು ಶಾಸಕರು ನನ್ನನ್ನು ಭೇಟಿ ಮಾಡಿ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಆಯೋಗ ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದೆ. ರಾಜ್ಯದ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿ ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ಅವರು ವರದಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ವರದಿಯ ಕುರಿತು ಮಾಹಿತಿ ನೀಡಿದರು.

ನಂತರ ಕಾಂತರಾಜು ಅವರ ಅವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಡೆ ಅವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಭೈರತಿ ಸುರೇಶ್, ಬೋಸರಾಜ್, ಮಧು ಬಂಗಾರಪ್ಪ, ಕಾಂಗ್ರೆಸ್‌ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್‌, ಪ್ರತಿಪಕ್ಷ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌, ಶಾಸಕರಾದ ಬೇಳೂರು ಗೋಪಾಲಕೃಷ್ಣ, ರಾಘವೇಂದ್ರ ಹಿಟ್ನಾಳ್, ಎಚ್.ಎಂ.ರೇವಣ್ಣ ಸೇರಿದಂತೆ ಮೂವತ್ತು ಮಂದಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಜೊತೆಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ನಿವೃತ್ತ ನ್ಯಾಯಾಧೀಶ ಡಾ.ಕಾಂತರಾಜ್, ಜಯಪ್ರಕಾಶ್ ಹೆಗ್ಡೆ, ಡಾ.ಸಿ.ಎಸ್.ದ್ವಾರಕನಾಥ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.

Tags:    

Similar News