ಜನಬೆಂಬಲಕ್ಕೆ ಹೆದರಿ ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್‌: ಸಿದ್ದರಾಮಯ್ಯ

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ

Update: 2024-09-27 10:01 GMT

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ಕೇಂದ್ರದಿಂದ ಅಧಿಕಾರದ ದುರ್ಬಳಕೆ

ಕೇಂದ್ರದ ಇಡಿ ಮತ್ತು ಸಿಬಿಐ ಗಳು ದುರ್ಬಳಕೆಯಾಗುತ್ತಿದ್ದು, ಆಪರೇಷನ್ ಕಮಲದ ಭಾಗವಾಗಿರಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜಿನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿ , ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ಬಿಜೆಪಿಗೆ ನೈತಿಕತೆ ಇಲ್ಲ

ಮೋದಿಯವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜಿನಾಮೆ ನೀಡಿದ್ದಾರೆಯೇ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ , ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ ಎಂದರು.

ಕಾನೂನು ವಿರೋಧಿ ಕೆಲಸ ಮಾಡಿಲ್ಲ

ಕುಮಾರಸ್ವಾಮಿಯವರು ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಉತ್ತರಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಆನೇಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯವರಿಗೆ ಈ ಧೋರಣೆ ಏಕೆ? ಬಿಜೆಪಿಯಲ್ಲಿ ತಪ್ಪು ಮಾಡದಿರುವ , ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ

ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಬಡವರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಮುಖ್ಯಮಂತ್ರಿಗಳ ಪರ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಜನಾದೇಶ ಎಂದಿಗೂ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

Tags:    

Similar News