UPPER BHADRA PROJECT | ಘೋಷಿಸಿದ ಅನುದಾನ ತಕ್ಷಣ ಬಿಡುಗಡೆ ಮಾಡಿ: ಕೇಂದ್ರಕ್ಕೆ ಎಚ್.ಕೆ ಪಾಟೀಲ್ ಆಗ್ರಹ

ಬರಪೀಡಿತ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್ ಒತ್ತಾಯಿಸಿದರು.

Update: 2024-09-11 11:15 GMT
ಎಚ್.ಕೆ ಪಾಟೀಲ್
Click the Play button to listen to article

2023- 24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವಂತೆ ಬರಪೀಡಿತ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕಾನೂನು ಸಚಿವ ಎಚ್‌. ಕೆ. ಪಾಟೀಲ್ ಒತ್ತಾಯಿಸಿದರು.

ಕಳೆದ ವರ್ಷ ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದು, ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುತ್ತವೆ ಎಂದು ತಿಳಿಸಿದ್ದರು. ಕೇಂದ್ರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿದೆ. ಆದರೆ ಈಗ ಯೋಜನೆಗೆ ಹಣ ಬಿಡುಗಡೆ ಮಾಡಲು ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ತದ್ವಿರುದ್ಧ ಎಂದು ಅವರು ಹೇಳಿದರು.

ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿವೆ. ಇದು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆಗಳನ್ನು ಪಡೆದಿದೆ ಎಂದು ತಿಳಿಸಿದೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 5,300 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ರಾಜ್ಯಕ್ಕೆ ಪತ್ರ ಬರೆದು ಯೋಜನೆಯ ಭೌಗೋಳಿಕ, ಯೋಜನೆಗಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನ ಮತ್ತು ಕೇಂದ್ರದ ನಿಧಿಯಲ್ಲಿರುವ ಅನುದಾನಕ್ಕನುಗುಣವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪತ್ರದಲ್ಲಿನ ಅಂಶಗಳನ್ನು ಗಮನಿಸಿದರೆ ಅನುದಾನದಲ್ಲಿ ಬಹುತೇಕ ಕಡಿತ ಅಥವಾ ತಿರಸ್ಕರಿಸುವ ಅನುಮಾನ ಮೂಡಿದೆ ಎಂದು ಕಿಡಿಕಾರಿದರು.

ಮಹದಾಯಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿಯೇ ಮಹದಾಯಿ ಜಲ ವಿವಾದ ಕುರಿತು ನ್ಯಾಯಮಂಡಳಿ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ನ್ಯಾಯಮಂಡಳಿ ಅವಶ್ಯಕತೆ ಇಲ್ಲದಿದ್ದರೂ ಕಾಂಗ್ರೆಸ್‌ ನ್ಯಾಯಮಂಡಳಿ ರಚಿಸಿತು ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿರುವುದು ಅವರ ನಿರ್ಲಕ್ಷವನ್ನು ತೋರುತ್ತದೆ. ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಒತ್ತಾಯಿಸಿದರು.

Tags:    

Similar News