'ಐದು ವರ್ಷವೂ ಅಪ್ಪನೇ ಸಿಎಂ': ಮುಖ್ಯಮಂತ್ರಿ ಬದಲಾವಣೆ ವದಂತಿಗಳಿಗೆ ಪುತ್ರನ ತೆರೆ

ಪಕ್ಷದಲ್ಲಿ ಕೆಲ ಗುಂಪುಗಳು ಮುಖ್ಯಮಂತ್ರಿ ಆಗಬೇಕು ಎಂದು ಊಹಾಪೋಹಗಳನ್ನು ಹರಡುತ್ತಿರುತ್ತಾರೆ. ಆದರೆ ಸಿಎಂಗೆ ಹೈಕಮಾಂಡ್ ಹಾಗೂ ಶಾಸಕರ ಬೆಂಬಲವಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.;

Update: 2025-06-28 14:28 GMT

ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಹಾಗೂ ವಿಧಾನಪರಿಷತ್‌ ಸದಸ್ಯ ಡಾ. ಯತೀಂದ್ರ ತೆರೆ ಎಳೆದಿದ್ದಾರೆ. ತಮ್ಮ ತಂದೆ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆಗಳು ಬರುತ್ತಲೇ ಇವೆ ಎಂದು ಡಾ. ಯತೀಂದ್ರ ಹೇಳಿದ್ದು, ಪಕ್ಷದಲ್ಲಿ ಕೆಲ ಗುಂಪುಗಳು ತಮ್ಮದೇ ನಾಯಕರು ಮುಖ್ಯಮಂತ್ರಿಯಾಗಬೇಕೆಂಬ ಆಕಾಂಕ್ಷೆಯಿಂದ ಇಂತಹ ಊಹಾಪೋಹಗಳನ್ನು ಹರಡುತ್ತಿರುತ್ತವೆ. ಆದರೆ, ಪ್ರಸ್ತುತ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಹಾಗೂ ಬಹುತೇಕ ಶಾಸಕರ ಸಂಪೂರ್ಣ ಬೆಂಬಲವಿದೆ ಎಂದು ಅವರು ದೃಢಪಡಿಸಿದರು.

ಯಾವುದೇ ಸಮಸ್ಯೆ ಇಲ್ಲ; ಸರ್ಕಾರ ಸುಸೂತ್ರ

ಸಚಿವ ಕೆ.ಎನ್‌. ರಾಜಣ್ಣ ಅವರ 'ರಾಜಕೀಯ ಶಕ್ತಿ ಕೇಂದ್ರ'ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ, ಆ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು ಎಂದರು. ಸದ್ಯ ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ಸುಸೂತ್ರವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್‌ ಯಾವುದೇ ಸೂಚನೆಯನ್ನು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯನವರು ಐದು ವರ್ಷವೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅವರು ಒತ್ತಿ ಹೇಳಿದರು. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಅರ್ಹತೆ ಇರುವವರು ಅನೇಕರಿದ್ದಾರೆ. ಇತ್ತೀಚೆಗೆ ಕೆಲ ಶಾಸಕರು ಅನುದಾನದ ಬಗ್ಗೆ ಹೇಳಿಕೆ ನೀಡಿದ್ದರೂ, ಯಾರೂ ಕೂಡ ಪಕ್ಷ ಹಾಗೂ ಸರ್ಕಾರದ ವಿರುದ್ಧವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿರೋಧ ಪಕ್ಷದ ಮಾತುಗಳಿಗೆ ಮಹತ್ವ ಇಲ್ಲ

ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರ ಹೇಳಿಕೆಗಳಿಗೆ ಮಹತ್ವ ಕೊಡಬೇಕಾಗಿಲ್ಲ. ಸರ್ಕಾರ ಆರಂಭವಾದಾಗಿನಿಂದಲೂ ಇದೇ ರೀತಿಯ ಹೇಳಿಕೆಗಳನ್ನು ಅವರು ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ, ಮೂಡ ಪ್ರಕರಣದಲ್ಲಿ ಬದಲಾಗುತ್ತಾರೆ ಎಂದೆಲ್ಲಾ ಅವರು ಹೇಳಿದ್ದರು. ಇಂತಹ ವಿರೋಧ ಪಕ್ಷಗಳ ಮಾತುಗಳಿಗೆ ಬೆಲೆ ಕೊಡಬೇಕಾಗಿಲ್ಲ ಎಂದು ಯತೀಂದ್ರ ತಳ್ಳಿಹಾಕಿದರು.

"ಹೈಕಮಾಂಡ್‌ನಿಂದ ಸಿಎಂ ಬದಲಾವಣೆ ಸೂಚನೆ ಇಲ್ಲ"

ಇತ್ತೀಚೆಗೆ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಪಕ್ಷದಲ್ಲಿ ಸಣ್ಣಪುಟ್ಟ ಹೇಳಿಕೆಗಳನ್ನು ನೀಡುತ್ತಾರೆ, ಆದರೆ ಯಾರೂ ಸರ್ಕಾರ, ಪಕ್ಷದ ವಿರುದ್ಧ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹೈಕಮಾಂಡ್ ಕೂಡ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅವರು ಪುನರುಚ್ಚರಿಸಿದರು. ಈ ಮೂಲಕ, ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆಗಳಿಗೆ ತಾತ್ಕಾಲಿಕವಾಗಿ ತೆರೆ ಬಿದ್ದಂತಾಗಿದೆ. 

Tags:    

Similar News