ಮುಖ್ಯಮಂತ್ರಿ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನ ಅಂತಿಮ ಎಂದ ಮಲ್ಲಿಕಾರ್ಜುನ ಖರ್ಗೆ

ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರೂ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ. ಅನಗತ್ಯವಾಗಿ ಯಾರೊಬ್ಬರೂ ಸಮಸ್ಯೆ ಸೃಷ್ಟಿಸಬಾರದು ಎಂದು ಹೇಳಿದ್ದಾರೆ;

Update: 2025-06-30 11:51 GMT

ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. 

ಬೆಂಗಳೂರಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು. ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾ ? ಅಥವಾ ಬೇಡವೇ? ಎಂಬುದು ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರೂ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ ಮತ್ತು ಮುಂದಿನ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ, ಅನಗತ್ಯವಾಗಿ ಯಾರೊಬ್ಬರೂ ಸಮಸ್ಯೆ ಸೃಷ್ಟಿಸಬಾರದು ಎಂದು ಹೇಳಿದರು. 

ಸರ್ಕಾರದ ಬಗ್ಗೆ ಸ್ವಪಕ್ಷೀಯರಲ್ಲಿಯೇ ಭಿನ್ನ ಹೇಳಿಕೆ ಇರುವುದನ್ನು ಗಮನಿಸಿದ್ದೇವೆ. ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿದ್ದು, ರಾಜ್ಯ ಸರ್ಕಾರದ ಬಗ್ಗೆ ಕಾಂಗ್ರೆಸ್‌ ಶಾಸಕರ ಅಸಮಾಧಾನದ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಏನು ನಡೆದಿದೆ? ಅವರು ಏನು ಹೇಳುತ್ತಾರೆ ಎಂಬುದರ ಕುರಿತು ವಿಷಯ ಸಂಗ್ರಹಿಸಲಿದ್ದಾರೆ. ಬಳಿಕ ಮುಂದೇನು ಮಾಡಬೇಕು ಎಂಬುದನ್ನು ಗಮನಿಸಲಾಗುವುದು ಎಂದರು. 

2023ರಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿದೆ. ಉಭಯ ನಾಯಕರು ತಲಾ 2.5 ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸುತ್ತಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ, ಈ ಬಗ್ಗೆ ಪಕ್ಷ ಯಾವುದೇ ಸ್ಪಷ್ಟನೆ ನೀಡಿಲ್ಲ ಅಥವಾ ತಿರಸ್ಕರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆಯಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. 


Tags:    

Similar News