ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ. ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು

Update: 2024-10-16 11:03 GMT
ಕಾವೇರಿ ಐದನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.

ಬೆಂಗಳೂರಿಗರಿಗೆ ಅನುಕೂಲವಾಗಲಿರುವ ಮಹತ್ವಾಕಾಂಕ್ಷೆ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಬಿಬಿಎಂಬಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಅವರು ಬುಧವಾರ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿಸಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು ಯೋಜನೆ ಲೋಕಾರ್ಪಣೆಗೊಳಿಸಿ 110 ಹಳ್ಳಿಗಳಿಗೆ ನೀರನ್ನು ಒದಗಿಸಿದ್ದೇವೆ. ಆರನೇ ಹಂತದ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಈಗಾಗಲೇ ಸೂಚನೆ ನೀಡಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ಯಾಕೆ ಅನುಮತಿ ಕೊಡಿಸುತ್ತಿಲ್ಲ?

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ಯಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ? ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ? ಕರ್ನಾಟಕ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ್ಯಾರೂ ಪ್ರಶ್ನಿಸುತ್ತಿಲ್ಲ ಯಾಕೆ? ಎಂದು ಸಿದ್ದರಾಮಯ್ಯ ಎಚ್‌ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡ್ತಾ ಇದ್ದೀವಿ. ಆದರೆ ವಾಪಾಸ್ ನಮಗೆ ಬರುತ್ತಿರುವುದು 60ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಾಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಈ ವೇಗಕ್ಕೆ ತಕ್ಕಂತೆ ಮೂಲಭೂತ ಸವಲತ್ತು ಒದಗಿಸುವ ಸವಾಲನ್ನು ನಮ್ಮ ಸರ್ಕಾರ ಸ್ವೀಕರಿಸಿ ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ಕುಡಿಯುವ ನೀರಿನ ಆರನೇ ಹಂತದ ಯೋಜನೆಯಿಂದ 500 MLD ಕುಡಿಯುವ ನೀರು ಬೆಂಗಳೂರಿಗರಿಗೆ ಸಿಗತ್ತೆ. ಇದನ್ನೂ ನಾವು ಘೋಷಿಸಿದ್ದೀವಿ. ನಾವು ಇದನ್ನೂ ಮಾಡಿ ತೋರಿಸ್ತೀವಿ ಎಂದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

Tags:    

Similar News