ಹೈಕಮಾಂಡ್ ನಾಯಕರ ಭೇಟಿಗೆ ಸಿಎಂ, ಡಿಸಿಎಂ ದೆಹಲಿ ದೌಡು; ಪರಿಷತ್, ನಿಗಮ-ಮಂಡಳಿ ನೇಮಕ ಚರ್ಚೆ?

ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ.;

Update: 2025-07-24 06:03 GMT
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಗುರುವಾರ) ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿರುವ ಉಭಯ ನಾಯಕರು, ನಾಳೆ ನಡೆಯಲಿರುವ ಒಬಿಸಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಅಧಿಕೃತ ಕಾರ್ಯಕ್ರಮದ ಜೊತೆಗೆ, ಈ ಪ್ರವಾಸವು ರಾಜಕೀಯವಾಗಿಯೂ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ವಿಧಾನ ಪರಿಷತ್ ಸ್ಥಾನಗಳ ನಾಮನಿರ್ದೇಶನ ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಕುರಿತು ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸುವುದು ಈ ಭೇಟಿಯ ಪ್ರಮುಖ ಉದ್ದೇಶವಾಗಿದೆ.

ಇದೇ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ. ಕಳೆದ ಬಾರಿ ದೆಹಲಿಗೆ ತೆರಳಿದ್ದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ, ಈ ಬಾರಿ ನಾಳೆ (ಶುಕ್ರವಾರ) ಅವರನ್ನು ಭೇಟಿಯಾಗಿ ಈ ಎಲ್ಲಾ ವಿಷಯಗಳ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಈ ಭೇಟಿಯ ನಂತರ, ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ರಾಜಕೀಯ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ಸಿಗಬಹುದು ಎಂಬ ನಿರೀಕ್ಷೆಗಳು ಕಾಂಗ್ರೆಸ್ ವಲಯದಲ್ಲಿ ಗರಿಗೆದರಿವೆ.

Tags:    

Similar News