ದೆಹಲಿಯಿಂದ ಆಗಮಿಸುತ್ತಿದ್ದಂತೆ ಅಸಮಾಧಾನಿತ ಶಾಸಕರ ಜೊತೆ ಸಿಎಂ ಸಭೆ
ಸರ್ಕಾರ ವಿರುದ್ಧ ಹೇಳಿಕೆ ನೀಡಿದ ಶಾಸಕ ರಾಜುಕಾಗೆ ಅವರೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿದರು. ಅಲ್ಲದೇ, ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೆ ವಸತಿ ಯೋಜನೆ ಅವ್ಯವಹಾರ ಕುರಿತು ಸಮಾಲೋಚನೆ ನಡೆಸಿದರು.;
ಮುಖ್ಯಮಂತ್ರಿ ಸಿದ್ದರಾಮಯ್ಯ
ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಬೇಸರ ವ್ಯಕ್ತಪಡಿಸಿದ ಶಾಸಕರು ಮತ್ತು ಸಚಿವರ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಸ್ವಪಕ್ಷ ನಾಯಕರೇ ಸರ್ಕಾರದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತದೆ. ಹೀಗಾಗಿ ಇಂತಹದಕ್ಕೆಲ್ಲಾ ಕಡಿವಾಣ ಹಾಕಬೇಕು ಎಂಬ ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದಂತೆ ಶಾಸಕ ರಾಜುಕಾಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಚರ್ಚೆ ನಡೆಸಿದರು.
ಖುದ್ದು ಚರ್ಚೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಸೂಚನೆ ಮೇರೆಗೆ ರಾಜುಕಾಗೆ ಅವರೊಂದಿಗೆ ಸಮಾಲೋಚನೆ ನಡೆಸಿದರು. ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಲು ಕಾರಣಗಳೇನು ಎಂಬುದರ ಕುರಿತು ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ರಾಜುಕಾಗೆ ಅವರು ತಮ್ಮ ಸಮಸ್ಯೆಗಳ ಕುರಿತು ತೋಡಿಕೊಂಡರು. ಅಲ್ಲದೇ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂಬ ಮುನ್ಸೂಚನೆ ನೀಡಿದರು ಎಂದು ಹೇಳಲಾಗಿದೆ.
ಇನ್ನು, ವಸತಿ ಯೋಜನೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಅಕ್ರಮದ ಕುರಿತು ಮಾಹಿತಿ ಪಡೆದುಕೊಂಡರು. ಕರ್ನಾಟಕ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವ್ಯವಹಾರ ಕುರಿತು ಹೇಳಿಕೆ ನೀಡಲು ಕಾರಣಗಳೇನು ಎಂಬಿತ್ಯಾದಿ ವಿಷಯಗಳನ್ನು ಕುರಿತು ಚರ್ಚೆ ನಡೆಸಿದರು. ಅಲ್ಲದೇ, ಅವ್ಯವಹಾರ ಸಂಬಂಧ ಬಹಿರಂಗವಾಗಿರುವ ಆಡಿಯೋದ ಸತ್ಯಾಸತ್ಯತೆಗಳೇನು ಎಂಬುದರ ಕುರಿತು ಸಹ ಮಾಹಿತಿ ಸಂಗ್ರಹಿಸಿದರು ಎಂದು ಮೂಲಗಳು ಹೇಳಿವೆ.