ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ವಾರ್ಷಿಕ ಉತ್ಸವದಲ್ಲಿ ಸಿಎಂ ಭಾಗಿ; ಸರ್ವಧರ್ಮ ಸಂದೇಶ

ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರು ಮುಂದಿಟ್ಟ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.;

Update: 2025-09-08 14:48 GMT
Click the Play button to listen to article

"ಎಲ್ಲಾ ಧರ್ಮಗಳ ಮೂಲ ತತ್ವ ಮಾನವೀಯತೆಯಾಗಿದ್ದು, ನಮ್ಮ ಸರ್ಕಾರವು ಬಹುತ್ವ ಸಂಸ್ಕೃತಿಯಲ್ಲಿ ಅಚಲವಾದ ಬದ್ಧತೆಯನ್ನು ಹೊಂದಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ನಮ್ಮ ಸರ್ಕಾರವು ಎಲ್ಲಾ ಜಾತಿ, ಧರ್ಮಗಳ ಬಡವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದು ಅವರು ಹೇಳಿದರು.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

"ದಯೆಯಿಲ್ಲದ ಧರ್ಮ ಯಾವುದಯ್ಯ, ದಯೆಯೇ ಧರ್ಮದ ಮೂಲವಯ್ಯ" ಎಂಬ ಬಸವಣ್ಣನವರ ವಚನವನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಧಾರ್ಮಿಕ ಸಹಿಷ್ಣುತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ ಎಂದರು. ಬಸವಣ್ಣನವರು ಪ್ರತಿಪಾದಿಸಿದ ಮೌಲ್ಯಗಳನ್ನೇ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರೂ ಸಾರಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪ್ರತಿಯೊಬ್ಬರಿಗೂ ಸಮಾನ ರಕ್ಷಣೆ ನೀಡಲಿದೆ ಎಂದು ಅವರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ, ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರು ಮುಂದಿಟ್ಟ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 

Tags:    

Similar News