ಡ್ರಗ್‌ ಮುಕ್ತ ಕರ್ನಾಟಕ| ಮಾದಕ ಜಾಲ ಹಣಿಯಲು ಗೃಹಸಚಿವ ನೇತೃತ್ವದ ಟಾಸ್ಕ್‌ ಫೋರ್ಸ್‌

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಯಾವುದೇ ಪೊಲೀಸ್‌ ಠಾಣೆ ವ್ಯಾಪ್ತಿಉಲ್ಲಿ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ, ಡಿವೈಎಸ್ ಪಿ, ಎಸಿಪಿ ಮತ್ತು ಜಿಲ್ಲಾ ಎಸ್‌ಪಿಗಳನ್ನು ಈ ಸಂಬಂಧ ಹೊಣೆ ಮಾಡಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Update: 2024-09-18 09:50 GMT

ಕರ್ನಾಟಕದಲ್ಲಿ ಡ್ರಗ್‌ ಜಾಲದ ಬೇರುಗಳನ್ನು ಕತ್ತರಿಸುವ ಉದ್ದೇಶದಿಂದ ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್‌ ರಚನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಟಾಸ್ಕ್‌ಫೋರ್ಸ್‌ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಸದಸ್ಯರಾಗಿರಲಿದ್ದಾರೆ.

ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.  ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು  ತೀರ್ಮಾನಗಳನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. " ರಾಜ್ಯದಲ್ಲಿ ಮಾದಕವಸ್ತು ಹಾವಳಿಯನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯಾರ್ಥಿ ಯುವ ಸಮೂಹ ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಡೆಯಲು ಎಲ್ಲಾ ಇಲಾಖೆಗಳು ಸಂಘಟಿತ ಪ್ರಯತ್ನ ಮಾಡಬೇಕು," ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಮಾತನಾಡಿ, ನೂತನ ಟಾಸ್ಕ್‌ಫೋರ್ಸ್‌ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲಿದೆ ಎಂದು ಹೇಳಿದ್ದಾರೆ. ಅಗತ್ಯ ಬಿದ್ದರೆ  ಇರುವ ಕಾನೂನನ್ನು ಇನ್ನಷ್ಟು ಇನ್ನಷ್ಟು ಬಲಿಷ್ಠಗೊಳಿಸಲಾಗುವುದು ಅಥವಾ  ಕಾನೂನು ರಚಿಸಿ ಡ್ರಗ್‌ ಜಾಲವನ್ನು ನಿಯಂತ್ರಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. "ಡ್ರಗ್‌ ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗುವುದು," ಎಂದೂ ಅವರು ಹೇಳಿದ್ದಾರೆ.

ಒಡಿಶಾ, ಆಂಧ್ರ ಪ್ರದೇಶ,   ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತುಗಳು ಕರ್ನಾಟಕ್ಕೆ ಸರಬರಾಜಾಗುತ್ತಿದೆ, ಇದನ್ನು ನಿಯಂತ್ರಿಸಲು ಹೊಸ ಕಾರ್ಯತಂತ್ರ ರೂಪಿಸಲಾಗುವುದು. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಯಾವುದೇ ಪೊಲೀಸ್‌ ಠಾಣೆ ವ್ಯಾಪ್ತಿಉಲ್ಲಿ  ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ, ಡಿವೈಎಸ್ ಪಿ, ಎಸಿಪಿ ಮತ್ತು ಜಿಲ್ಲಾ ಎಸ್‌ಪಿಗಳನ್ನು ಈ ಸಂಬಂಧ  ಹೊಣೆ ಮಾಡಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

ವಿದ್ಯಾರ್ಥಿ ಪೊಲೀಸ್‌

ಶಾಲೆ, ಕಾಲೇಜುಗಳಲ್ಲಿ, ವಸತಿ ಶಾಲೆಗಳಲ್ಲಿ  ಡ್ರಗ್ಸ್‌ ಜಾಲದ ಕುರಿತು ಹೆಚ್ಚಿನ ನಿಗಾ ವಹಿಸಲು ಸ್ಟೂಡೆಂಟ್ ಪೊಲೀಸಿಂಗ್ (ವಿದ್ಯಾರ್ಥಿ ಪೊಲೀಸ್‌) ವ್ಯವಸ್ಥೆ ಜಾರಿಗೆ ತರಲಾಗುವುದು. ಎನ್‌ಸಿಸಿ, ಎನ್‌ಎಸ್‌ಎಸ್‌ ಘಟಕಗಳನ್ನು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಎನ್‌ಸಿಸಿ , ಸ್ವಯಂ ಸೇವಾ ಸಂಸ್ಥೆಗಳು (ಎನ್‌ಜಿಒ) ಇತ್ಯಾದಿಗಳನ್ನುಬಲಪಡಿಸಿ ಡ್ರಗ್‌ ಜಾಲದ ನಿಯಂತ್ರಣಕ್ಕೆ ಪ್ರಯತ್ನಿಸಲಾಗುವುದು. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು, ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುವುದುನ್ರುನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಪೊಲೀಸರಿಗೆ ಸ್ವಾತಂತ್ರ್ಯ ನೀಡಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ. ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದ ಅವರು, ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ," ಎಂದು ಹೇಳಿದ್ದಾರೆ.

ಸಭೆಯಲ್ಲಿ ಚರ್ಚೆಗೆ ಬಂದ ಇತರ ಅಂಶಗಳು

• ಸರ್ಕಾರವು ಮಾದಕ ವಸ್ತುಗಳ ಹಾವಳಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಇದರ ವಿರುದ್ಧದ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತಂದು ಕಾನೂನು ಬಲ ಪಡಿಸುವ ಕುರಿತು ಪರಿಶೀಲಿಸುವಂತೆ ಸೂಚಿಸಲಾಗಿದೆ. ಮಾದಕ ವಸ್ತುಗಳ ಪೆಡ್ಲರ್‌ಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ಸೇರಿದಂತೆ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲು ನಿರ್ಧಾರ. ಕಾನೂನು ಕಾರ್ಯದರ್ಶಿ ಮತ್ತು ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸಿ ಈ ಕುರಿತು ಅಂತಿಮ ರೂಪುರೇಷೆ ನಿಗದಿ ಪಡಿಸುವಂತೆ ಸಿಎಂ ಸೂಚನೆ

• ಪೊಲೀಸ್ ಇಲಾಖೆಗೆ ಮಾದಕ ವಸ್ತುಗಳ ಮಾರಾಟ, ಸರಬರಾಜು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿರುವ ಸೂಕ್ಷ್ಮ ಪೊಲೀಸ್‌ ಠಾಣಾ ವ್ಯಾಪ್ತಿಗಳನ್ನು ಗುರುತಿಸಿ, ಅಂತಹ ಕಡೆ ಮಾದಕ ವಸ್ತುಗಳ ನಿಯಂಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಆಯಾ ಠಾಣೆಯ ಇನ್ಸ್‌ಪೆಕ್ಟರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.

• ಔಷಧಿ ಮಳಿಗೆಗಳಲ್ಲಿ ಅನಧಿಕೃತವಾಗಿ ಸಿಂಥೆಟಿಕ್ ಡ್ರಗ್ಸ್, ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್‌ಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಯಿತು. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದವರ ಪರವಾನಗಿಯನ್ನು ರದ್ದುಪಡಿಸಲು ಸೂಚಿಸಲಾಯಿತು. ಔಷಧಿ ಮಳಿಗೆಗಳ ಮೇಲೆ ನಿರಂತರ ನಿಗಾ ಇರಿಸಿ, ಆಗಿಂದಾಗ್ಗೆ ಪರಿಶೀಲನೆ ನಡೆಸುವಂತೆ ಡ್ರಗ್ಸ್‌ ಕಂಟ್ರೋಲ್‌ ಇಲಾಖೆಗೆ ಸೂಚನೆ ನೀಡಲಾಯಿತು.

• ಮಾದಕ ದ್ರವ್ಯ ಹಾವಳಿ ತಡೆಗೆ ಇರುವ ಜಿಲ್ಲಾ ಸಮಿತಿಗಳು ಹೆಚ್ಚು ಸಕ್ರಿಯವಾಗಿ, ಜಿಲ್ಲೆಗಳಲ್ಲಿ ಮಾದಕ ದ್ರವ್ಯ‌ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

• ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ತಮ್ಮ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲುಗಳಲ್ಲಿ ನಿಯಮಿತವಾಗಿ ಜಾಗೃತಿ ಮೂಡಿಸಬೇಕು.

• ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಹಾಗೂ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

• ಪ್ರತಿಯೊಂದು ಇಲಾಖೆಗೆ/ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನಿಗದಿಪಡಿಸಿ, ಕಟ್ಟುನಿಟ್ಟಿನಿಂದ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಲಾಯಿತು.

Full View

Tags:    

Similar News