ಪ್ರಾಸಿಕ್ಯೂಷನ್ ಅನುಮತಿ ಕ್ರಮ ಪ್ರಶ್ನಿಸಿ ರಾಜ್ಯಪಾಲರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಿಎಂ

Update: 2024-08-19 07:55 GMT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ʼಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ' ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಿಎಂ ವಿರುದ್ಧ ಶನಿವಾರ ತನಿಖೆಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ತಿಳಿಸಿದೆ.

ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮೆಮೊ ಮೂಲಕ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿದರು.

ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ಮೂವರು ಫಿರ್ಯಾದುದಾರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿಯಲ್ಲಿ ಏನಿದೆ?

2024ರ ಜುಲೈ 26ರಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಸೆಕ್ಷನ್ (ಪಿಸಿ ಆ್ಯಕ್ಟ್) 17ಎ, 19 ಮತ್ತು ಭಾರತೀಯ ನ್ಯಾಯ‌ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)ಸೆಕ್ಷನ್ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕೋರಿದ್ದಾರೆ.‌ ಅದೇ ದಿನ ರಾಜ್ಯಪಾಲರು ಕಾನೂನು ಮತ್ತು ಸಂವಿಧಾನಾತ್ಮಕ ಅಂಶಗಳನ್ನು ಪರಿಗಣಿಸದೆ ವಿವೇಚನಾ ರಹಿತವಾಗಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಇದಕ್ಕೆ ಮುಖ್ಯಮಂತ್ರಿಗಳು ವಿವರವಾದ ಪ್ರತಿಕ್ರಿಯೆ ನೀಡಿದ್ದರು. ಜತೆಗೆ, ಸಂಪುಟದ ಸಲಹೆ ಹೊರತಾಗಿಯು ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆಗಸ್ಟ್‌ 16 ರಂದು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ವಿವರವಾದ ಪ್ರತಿಕ್ರಿಯೆಯಲ್ಲಿ ಕಾನೂನು ಮತ್ತು ವಾಸ್ತವಿಕತೆಗಳನ್ನು ಸ್ಪಷ್ಟವಾಗಿ ವಿವರಿಸಿದ್ದಾರೆ, ಅವುಗಳನ್ನು ಪರಿಗಣಿಸದೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಈ ನಡೆ ಸ್ಪಷ್ಟವಾಗಿ ಸ್ವಾಭಾವಿಕ ನ್ಯಾಯದ ಉಲ್ಲಂಘನೆ ಆಗಿದೆ.‌ ವಿವೇಚನಾ ರಹಿತವಾಗಿದ್ದು, ಪಿಸಿ ಕಾಯಿದೆಯ ಸೆಕ್ಷನ್ 17ಎ ಮತ್ತು 19ರ ಬಿಎನ್ಎಸ್ಎಸ್‌ ಸೆಕ್ಷನ 180ರ ನಿಬಂಧನೆಗಳಿಗೆ ವಿರುದ್ಧವಾಗಿದೆ.

ರಾಜ್ಯಪಾಲರು ಮುಖ್ಯಮಂತ್ರಿಗಳು ನೀಡಿದ್ದ ಪ್ರತಿಕ್ರಿಯೆನ್ನು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದೊಂದು ವಿವೇಚನಾ ರಹಿತ ಮತ್ತು ಆತುರದ ಹಾಗೂ ಅಸಾಂವಿಧಾನಿಕ ನಿರ್ಧಾರವಾಗಿದೆ. ಹೀಗಾಗಿ, ಈ ಆದೇಶವನ್ನು ಅಗತ್ಯ ದಾಖಲೆಗಳ ಪರಿಗಣಿಸದೆ ಹೊರಡಿಸಿದ್ದು, ರದ್ದುಮಾಡಬೇಕು. ಅಲ್ಲದೆ, ಈ ಆದೇಶಕ್ಕೆ ಮಧ್ಯಂತರ ಪರಿಹಾರ ನೀಡದಿದ್ದಲ್ಲಿ ಅರ್ಜಿದಾರರ ಘನತೆಗೆ ಸರಿಪಡಿಸಲಾಗದ ಹಾನಿಯಾಗಲಿದೆ. ಜತೆಗೆ ಮುಖ್ಯಮಂತ್ರಿಗಳ ಕಚೇರಿಯ ಕಾರ್ಯನಿರ್ವಹಣೆಗೂ ತೊಡಕಾಗಲಿದೆ. ಹೀಗಾಗಿ ರಾಜ್ಯಪಾಲರ ಆದೇಶವನ್ನು ಕಾರ್ಯರೂಪಕ್ಕೆ ತರುವುದಕ್ಕೆ ತಡೆ‌ ನೀಡಬೇಕು ಎಂದು ಮಧ್ಯಂತರ ಪರಿಹಾರವನ್ನು ಕೋರಿದ್ದಾರೆ.

Tags:    

Similar News