ಸಿಎಂ ಹುದ್ದೆ ಆಕಾಂಕ್ಷಿಗಳಲ್ಲಿ ಡಿಕೆಶಿ ಮುಂದೆ: ವಿಜಯೇಂದ್ರ ಭವಿಷ್ಯ

Update: 2024-09-06 11:43 GMT

ಮುಡಾ ಹಗರಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಮತ್ತು  ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕ್ರಡಿಟ್‌ ವಾರ್ ನಡೆಸುತ್ತಿದ್ದಾರೆ.  ಮುಖ್ಯಮಂತ್ರಿ ಉದ್ಘಾಟನಾ ಸ್ಥಳಕ್ಕೆ ಹೋಗುವ  ಮುಂಚಿತವಾಗಿಯೇ  ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂಜೆ ಪುನಸ್ಕಾರ ಮಾಡಿದ್ದಾರೆ.  ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಯಲ್ಲಿದ್ದಾರೆ ಎಂದರು.

ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ; ಎತ್ತಿನಹೊಳೆ ಯೋಜನೆ ಆ ಭಾಗದ ಜನರಿಗೆ ಅನುಕೂಲ ಆಗಬೇಕು. ಅದರಲ್ಲಿ ಪ್ರಾಮಾಣಿಕತೆ ತೋರಿಸಿದರೆ ಸಾಕು. ಎತ್ತಿನಹೊಳೆ ಯೋಜನೆ: ಕಳೆದ ಹಲವಾರು ದಶಕಗಳಿಂದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡುವ ಯೋಜನೆ ಇದಾಗಿದೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ಯೋಜನಾ ವೆಚ್ಚ ಇದ್ದುದು ಈಗ ಅದು 20-22,500 ಕೋಟಿಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ; ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ  ಬಿಜೆಪಿ ನಾಯಕರ ವಿರುದ್ಧ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Tags:    

Similar News