ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಪತ್ರ ಬರೆದ ಸಿಎಂ: ಬೆಲೆ ಕೊರತೆ ಪಾವತಿ ಯೋಜನೆಗೆ ಮನವಿ

ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತಕಾಯುವ ಸಲುವಾಗಿ ಕೂಡಲೇ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ (PDPS) ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಕೋರಿದ್ದಾರೆ.;

Update: 2025-06-13 06:37 GMT
PM Modi should answer for his statement on changing the constitution: CM Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ 

ಪ್ರಸಕ್ತ ಹಂಗಾಮಿನಲ್ಲಿ ಮಾವು ಬೆಲೆ ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡಿದ್ದು, ಕರ್ನಾಟಕದ ಮಾವು ಬೆಳೆಗಾರರು ನೆರವಿಗೆ ಧಾವಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತಕಾಯುವ ಸಲುವಾಗಿ ಕೂಡಲೇ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ (PDPS) ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಕೋರಿದ್ದಾರೆ.

ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಮಾವು ಕೂಡ ಒಂದು. ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ಬೆಳೆ ಬೆಳೆಯಲಾಗಿದೆ. ಆದರೆ, ಈ ಋತುವಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಅಂದಾಜು 8-10 ಲಕ್ಷ ಮೆಟ್ರಿಕ್ ಟನ್ ಮಾವು ಇಳುವರಿ ನಿರೀಕ್ಷೆಯಿದೆ.

ಮೇ ತಿಂಗಳಿಂದ ಜುಲೈವರೆಗಿನ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಮಾವಿನ ಪಸಲು ಮಾರುಕಟ್ಟೆಗೆ ಆವಕವಾಗಲಿದೆ.

ಇದರಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರವಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಕ್ವಿಂಟಲ್‌ಗೆ 12 ಸಾವಿರ ರೂ. ಆಸುಪಾಸಿನಲ್ಲಿದ್ದ ಮಾರುಕಟ್ಟೆ ಬೆಲೆ ಈಗ 3 ಸಾವಿರಕ್ಕೆ ಇಳಿದಿದೆ. ಆದರೆ ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗವು ಕ್ವಿಂಟಲ್‌ಗೆ 25,466 ರೂ. ಕೃಷಿ ವೆಚ್ಚ ದಾಖಲಿಸಿದೆ.

ಹೀಗಿರುವಾಗ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಬೆಲೆಯ ನಡುವೆ ಹೊಂದಾಣಿಕೆಯಾಗದೇ ರೈತ ಸಮುದಾಯ ತೀವ್ರ ಆರ್ಥಿಕ ಒತ್ತಡಕ್ಕೆ ಒಳಗಾಗಿದೆ.

ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ಮಾವು ಬೆಳೆಗಾರರು ಹಾಕಿದ ಬಂಡವಾಳ ಪಡೆಯಲು ಪರದಾಡುತ್ತಿದ್ದಾರೆ ಎಂದು ಸಿಎಂ ಅವರು ಕೇಂದ್ರದ ಗಮನ ಸೆಳೆದಿದ್ದಾರೆ.

ರಾಜ್ಯದಲ್ಲಿ ಮಾವು ಬೆಲೆ ಕುಸಿತದಿಂದ ರೈತರು ವ್ಯಾಪಕ ಪ್ರತಿಭಟನೆಗೆ ಇಳಿದಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಬಿಕ್ಕಟ್ಟು ತೀವ್ರವಾಗಿ ಗಂಭೀರ ಸಾಮಾಜಿಕ-ಆರ್ಥಿಕ ಪರಿಣಾಮಗಳಿಗೆ ಕಾರಣವಾಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ತುರ್ತಾಗಿ ಮಾವಿನ ಬೆಲೆಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿ ಬೆಲೆ ಕೊರತೆ ಪಾವತಿ ಯೋಜನೆ (PDPS) ಘೋಷಿಸಬೇಕು. ನಫೆಡ್( NAFED) ಮತ್ತು NCCF ನಂತಹ ಗೊತ್ತುಪಡಿಸಿದ ಸಂಸ್ಥೆಗಳಿಗೆ ಸೂಕ್ತ ಮಧ್ಯಸ್ಥಿಕೆ ಬೆಲೆಯಲ್ಲಿ ರಾಜ್ಯದ ರೈತರ ಇಳುವರಿ ಖರೀದಿಗೆ ಮುಂದಾಗುವಂತೆ ನಿರ್ದೇಶನ ನೀಡಬೇಕು. ಇಂತಹ ಸಕಾಲಿಕ ಮಧ್ಯಪ್ರವೇಶದಿಂದಾಗಿ ಬೆಲೆಗಳನ್ನು ಸ್ಥಿರಗೊಳಿಸಲು ಸಹಾಯವಾಗಲಿದೆ.

ಕರ್ನಾಟಕದ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಸಹಾನುಭೂತಿ ತೋರಸಬೇಕು ಎಮದು ಸಿಎಂ ಮನವಿ ಮಾಡಿದ್ದಾರೆ.

Tags:    

Similar News