ಭೋವಿ ನಿಗಮದಲ್ಲಿ ಕಮಿಷನ್ ಬೇಡಿಕೆ: ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
ಸಿಎಂ ಸಿದ್ದರಾಮಯ್ಯನವರೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರವನ್ನ ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ ಎಂದು ತಿಳಿಸಿದ್ದಾರೆ.;
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಭೂ ಒಡೆತನ ಯೋಜನೆಯಡಿ ಹಣ ಬಿಡುಗಡೆ ಮಾಡಲು 5 ಲಕ್ಷ ರೂಪಾಯಿ ಕಮಿಷನ್ ಕೇಳಲಾಗಿದೆ ಎನ್ನಲಾದ ಪ್ರಕರಣವನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದ ಫಲಾನುಭವಿಯೊಬ್ಬರಿಗೆ 25 ಲಕ್ಷ ರೂಪಾಯಿ ಸಹಾಯಧನ ಬಿಡುಗಡೆ ಮಾಡಲು, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು 5 ಲಕ್ಷ ರೂಪಾಯಿ ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ. ಈ ಘಟನೆಯು ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ," ಎಂದು ಟೀಕಿಸಿದ್ದಾರೆ.
ಸರಣಿ ಆರೋಪಗಳು
ಅಶೋಕ್ ತಮ್ಮ ಆರೋಪವನ್ನು ಕೇವಲ ಒಂದು ಪ್ರಕರಣಕ್ಕೆ ಸೀಮಿತಗೊಳಿಸದೆ, ಸರ್ಕಾರದ ವಿರುದ್ಧ ಹಲವು ಗಂಭೀರ ದೂರುಗಳನ್ನು ಪಟ್ಟಿ ಮಾಡಿದ್ದಾರೆ: ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಗಳನ್ನು ತೆಲಂಗಾಣ ಮತ್ತು ಲೋಕಸಭಾ ಚುನಾವಣೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಭ್ರಷ್ಟಾಚಾರವನ್ನು ಸ್ವತಃ ಮುಖ್ಯಮಂತ್ರಿಗಳೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಅಶೋಕ್ ನೆನಪಿಸಿದ್ದಾರೆ.
ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ನಿಧಿಯಿಂದ ಪ್ರತಿ ವರ್ಷ 15,000 ಕೋಟಿ ರೂಪಾಯಿಗಳನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಸರ್ಕಾರವು ದಲಿತರಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.
"ಅಂಗೈ ಹುಣ್ಣಿಗೆ ಕನ್ನಡಿ ಬೇಕೇ? ಎಸ್ಸಿಎಸ್ಪಿ-ಟಿಎಸ್ಪಿ ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಿದೆ. ಈಗ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮವು ಸಾಕ್ಷಿ ಸಮೇತ ಬಹಿರಂಗವಾಗಿದೆ," ಎಂದು ಅವರು ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಎಲ್ಲಾ ಹಗರಣಗಳು ಬಯಲಿಗೆ ಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಂಡು ಕೂತಿದ್ದಾರೆ ಎಂದು ಟೀಕಿಸಿದ ಅಶೋಕ್, "ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಮತ್ತು ನೈತಿಕತೆ ಇದ್ದರೆ, ತಾವು ಇನ್ನೊಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು," ಎಂದು ಆಗ್ರಹಿಸಿದ್ದಾರೆ.