ದೌರ್ಜನ್ಯದಿಂದ ಮೃತಪಟ್ಟ ಎಸ್​​ಸಿ/ಎಸ್​ಟಿ ಕುಟುಂಬಕ್ಕೆ ಅನುಕಂಪದ ನೌಕರಿ: ಸಚಿವ ಸಂಪುಟದ ಐತಿಹಾಸಿಕ ನಿರ್ಧಾರ

ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳಿಗೆ 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ.

Update: 2025-09-18 15:07 GMT

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

Click the Play button to listen to article

ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಕುಟುಂಬಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಇಂತಹ ಕುಟುಂಬಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ 'ಸಿ' ಮತ್ತು 'ಡಿ' ವೃಂದದ ಸರ್ಕಾರಿ ಹುದ್ದೆಗಳನ್ನು ನೀಡಲು ಐತಿಹಾಸಿಕ ಅನುಮೋದನೆ ನೀಡಲಾಗಿದೆ.

ಈ ಮಹತ್ವದ ನಿರ್ಧಾರದ ಜೊತೆಗೆ, ಸಭೆಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೂ ಕೋಟ್ಯಂತರ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಯಿತು. ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ಒಟ್ಟು 74.88 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಬಯೋ-ಸಿಎನ್‌ಜಿ ಘಟಕಗಳನ್ನು ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದೆ. ಹಾಗೆಯೇ, ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳಿಗೆ 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಭಾಗವಾಗಿ, ರಾಜ್ಯದ 90 ಸರ್ಕಾರಿ ಐಟಿಐಗಳಿಗೆ 50 ಕೋಟಿ ರೂ. ವೆಚ್ಚದಲ್ಲಿ ಹೊಸ ಯಂತ್ರೋಪಕರಣಗಳನ್ನು ಖರೀದಿಸಲು ಮತ್ತು 9,337 ಶಾಲೆಗಳಿಗೆ ಬಿಸಿಯೂಟದ ಹೊಸ ಪಾತ್ರೆಗಳನ್ನು ಖರೀದಿಸಲು 21.55 ಕೋಟಿ ರೂ. ಅನುದಾನ ಒದಗಿಸಲು ಅನುಮತಿ ನೀಡಲಾಗಿದೆ. ಇದಲ್ಲದೆ, ಗದಗ ಮತ್ತು ಯಾದಗಿರಿ ಜಿಲ್ಲೆಗಳ ನೀರಾವರಿ ಯೋಜನೆಗಳಿಗೆ ಒಟ್ಟು 125.33 ಕೋಟಿ ರೂ.ಗಳ ಅನುದಾನಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕಾರಾಗೃಹಗಳಲ್ಲಿ ಭದ್ರತೆ

ಕಾರಾಗೃಹಗಳ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ರಾಜ್ಯದ ಎಂಟು ಜಿಲ್ಲೆಗಳ ಕಾರಾಗೃಹಗಳಲ್ಲಿ 16.75 ಕೋಟಿ ರೂ. ವೆಚ್ಚದಲ್ಲಿ ಮೊಬೈಲ್ ಜಾಮರ್ ಟವರ್‌ಗಳನ್ನು ಅಳವಡಿಸಲು ಸಂಪುಟ ಸಮ್ಮತಿಸಿದೆ. ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ರಸ್ತೆಗಳ ಅಭಿವೃದ್ಧಿಗೆ 58.44 ಕೋಟಿ ರೂ. ಹಾಗೂ ಛಲವಾದಿ ಸಮುದಾಯ ಭವನ ನಿರ್ಮಾಣಕ್ಕೆ 22.33 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಕೂಡ ಸಂಪುಟ ತೀರ್ಮಾನಿಸಿದೆ

Tags:    

Similar News