ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧ ಆಯ್ಕೆ
ಜೆಪಿ ಭವನದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ, ದೇಶದಾದ್ಯಂತ ಬಂದಿದ್ದ ಪ್ರತಿನಿಧಿಗಳು ಒಕ್ಕೊರಲಿನಿಂದ ಈ ನಿರ್ಣಯವನ್ನು ಕೈಗೊಂಡರು.
ಜೆಡಿಎಸ್ ಪಕ್ಷದ 25ನೇ ವರ್ಷದ ಬೆಳ್ಳಿಹಬ್ಬದ ಸಂಭ್ರಮದ ಹೊಸ್ತಿಲಲ್ಲಿ, ಪಕ್ಷದ ನಾಯಕತ್ವದ ಚುಕ್ಕಾಣಿಯನ್ನು ಮತ್ತೊಮ್ಮೆ ಅನುಭವಿ ಕೈಗಳಿಗೆ ಒಪ್ಪಿಸಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ಜೆಪಿ ಭವನದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ, ದೇಶದಾದ್ಯಂತ ಬಂದಿದ್ದ ಪ್ರತಿನಿಧಿಗಳು ಒಕ್ಕೊರಲಿನಿಂದ ಈ ನಿರ್ಣಯವನ್ನು ಕೈಗೊಂಡರು. ಪಕ್ಷಕ್ಕೆ ಈಗ ಕಾಲು ಶತಮಾನದ ಇತಿಹಾಸವಿದ್ದು (25 ವರ್ಷ), ಈ ಮಹತ್ವದ ಮೈಲಿಗಲ್ಲಿನ ಸಂದರ್ಭದಲ್ಲಿ ಪಕ್ಷವನ್ನು ಮುನ್ನಡೆಸಲು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರೇ ಸಮರ್ಥರು ಎಂದು ಮಂಡಳಿ ಅಭಿಪ್ರಾಯಪಟ್ಟಿತು.
ಪಕ್ಷ ಸಂಘಟನೆಗೆ ಹೊಸ ಚೈತನ್ಯ
ರಾಷ್ಟ್ರೀಯ ಮಂಡಳಿ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, "ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ ಇಂದಿಗೂ ಗಟ್ಟಿಯಾಗಿ ತಳವೂರಿದೆ. ಇದಕ್ಕೆ ದೇವೇಗೌಡರ ಹೋರಾಟ ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮವೇ ಕಾರಣ. ದೇವೇಗೌಡರು ತಮ್ಮ ಇಡೀ ಜೀವನವನ್ನೇ ಪಕ್ಷಕ್ಕಾಗಿ ತೇದು, ಅಸಂಖ್ಯಾತ ಕಾರ್ಯಕರ್ತರ ಪಡೆಯನ್ನು ಕಟ್ಟಿದ್ದಾರೆ. ಈಗ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿದ್ದು, ಇವರಿಬ್ಬರ ನಾಯಕತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಂಕಲ್ಪ ಮಾಡಲಾಗಿದೆ," ಎಂದು ತಿಳಿಸಿದರು.
ನಿಖಿಲ್ ಸಂಘಟನೆಗೆ ಮೆಚ್ಚುಗೆ
ಇದೇ ಸಂದರ್ಭದಲ್ಲಿ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ನಡೆಸುತ್ತಿರುವ ಸಂಘಟನಾ ಪ್ರವಾಸ ಮತ್ತು ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಸಭೆಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಯುವ ನಾಯಕತ್ವದಲ್ಲಿ ಪಕ್ಷದ ಸಂಘಟನೆ ಚುರುಕುಗೊಂಡಿದೆ ಎಂದು ಹಿರಿಯ ನಾಯಕರು ಶ್ಲಾಘಿಸಿದರು.
ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ನಿಲ್ಲುವ ಮತ್ತು ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯಗಳಿಗೆ ಅಧಿಕೃತ ಮುದ್ರೆ ಬೀಳಲಿದೆ.
ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.