ED Investigation | ಸಿದ್ದರಾಮಯ್ಯ ಸೇರಿದಂತೆ ಎಂಟು ಮಂದಿ ಮೇಲೆ ಉಂಟು ಇಡಿ ನಂಟು!
ಎರಡು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು, ಶಾಸಕರು, ಸಚಿವರ ಮೇಲೆ ಇಡಿ ಕಾರ್ಯಾಚರಣೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಳಿ ನಡೆಸಲಾಗಿದೆ.;
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೇಂದ್ರ ತನಿಖಾ ಸಂಸ್ಥೆಗಳು ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ನಡೆಸುವ ಪ್ರಕ್ರಿಯೆ ಆರಂಭಿಸಿದೆ ಎಂಬ ಆರೋಪಗಳು ನಿರಂತರವಾಗಿ ಕೇಳಿ ಬರುತ್ತಿವೆ. ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ), ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸುತ್ತಿವೆ.
ಅದರಲ್ಲೂ ಸಿಬಿಐಗಿಂತ ಹೆಚ್ಚಾಗಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಕಾರ್ಯಾಚರಣೆಗಳು ಬಹುತೇಕ ನಡೆಯುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಪ್ತರು ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ಮೇಲೂ ಇಡಿ ದಾಳಿ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳ ಕಾಲ ಪೂರೈಸಿದೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಸೇರಿದಂತೆ ಕೆಲವು ಸಚಿವರು ಮತ್ತು ಕಾಂಗ್ರೆಸ್ ಮುಖಂಡರ ಮೇಲೂ ಇಡಿ ದಾಳಿ ನಡೆಸಿದೆ. ಮುಡಾ ಹಗರಣ ವಿಷಯವಾಗಿ ಸಿದ್ದರಾಮಯ್ಯ ಆಪ್ತರ, ಸಿದ್ದಾರ್ಥ ಕಾಲೇಜಿನಲ್ಲಿ ಅವ್ಯವಹಾರ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕರಾದ ನಾ.ರಾ. ಭರತ್ ರೆಡ್ಡಿ, ಕಂಪ್ಲಿ ಗಣೇಶ್, ಸಂಸದ ಇ-ತುಕಾರಾಂ, ಚಿನ್ನ ವಂಚನೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ, ಡಿಸಿಎಂ ಡಿ.ಕೆ. ಶಿವಕುಮಾರ್ ಸೋದರ - ಮಾಜಿ ಸಂಸದ ಡಿ.ಕೆ. ಸುರೇಶ್ವ ರಿಗೆ ಸೇರಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡು ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ. ಕಾಂಗ್ರೆಸ್ ಇದನ್ನು ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದರೆ, ಬಿಜೆಪಿ ದಾಳಿಯನ್ನು ಸಮರ್ಥಿಸಿಕೊಂಡು ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡುವ ಕೆಲಸ ಮಾಡುತ್ತಿದೆ.
ಸಿದ್ದರಾಮಯ್ಯಗೆ ಇಡಿ ಶಾಕ್... ಆಪ್ತರ ಮನೆಗಳ ಮೇಲೆ ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಮುಡಾ ಹಗರಣ ಬಯಲುಗೊಂಡು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಯಿತು. ಪ್ರತಿಪಕ್ಷ ಬಿಜೆಪಿ ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಟೀಕಾಪ್ರಹಾರ ನಡೆಸಿದವು. ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರೂ ಸರಿಯಾದ ತನಿಖೆ ನಡೆಯದಿದ್ದಾಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕದ ತಟ್ಟಲಾಯಿತು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡರು. ಪ್ರಕರಣದಲ್ಲಿ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಗೊತ್ತಾಗುತ್ತಿದ್ದಂತೆ ಇಡಿ ಅಧಿಕಾರಿಗಳು ಮಧ್ಯಪ್ರವೇಶಿಸಿ ವಿವಿಧೆಡೆ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿಚಾರದಲ್ಲಿ 50:50 ಅನುಪಾತದಡಿ ನಿವೇಶನಗಳನ್ನು ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5,000 ಕೋಟಿ ರೂಪಾಯಿನಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದವು. ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾದ ನಂತರ ಹೆಚ್ಚಿನ ಸದ್ದು ಮಾಡಿತು. ಅವರ ಪತ್ನಿ ಪಾರ್ವತಿಗೆ ಹೆಚ್ಚಿನ ಮೌಲ್ಯ ಹೊಂದಿರುವ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲಾಗಿದ್ದು, ಇದರಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿ ಬಂದಿವೆ.
ಸಿದ್ದರಾಮಯ್ಯ ಆಪ್ತರಾದ ರಾಕೇಶ್ ಪಾಪಣ್ಣ, ಮರೀಗೌಡ ಮತ್ತು ಮಾಜಿ ಮುಡಾ ಮಾಜಿ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಮತ್ತು ಡಿ.ಬಿ. ನಟೇಶ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತು. ಅಲ್ಲದೇ, ಮುಡಾ ಕಚೇರಿ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು. ದಾಳಿ ವೇಳೆ ನಡೆಸಿದ ಶೋಧ ಕಾರ್ಯದಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸರಕಾರಿ ಆದೇಶಗಳನ್ನು ನೇರವಾಗಿ ಉಲ್ಲಂಘಿಸಿ, ನಕಲಿ ಮತ್ತು ಅಪೂರ್ಣ ದಾಖಲೆಗಳನ್ನು ಬಳಸಿ ಮುಡಾ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಕೆಲ ಸಂದರ್ಭಗಳಲ್ಲಿ ಹಿಂದಿನ ದಿನಾಂಕಗಳನ್ನು ನಮೂದಿಸಿ ನಿವೇಶನ ಹಂಚಿಕೆ ಪತ್ರ ನೀಡಲಾಗಿದೆ. ಈ ಅಕ್ರಮ ಹಂಚಿಕೆಗಳಿಗೆ ಪ್ರತಿಯಾಗಿ ಸಹಕಾರಿ ಸಂಘ ಮತ್ತು ಹಂಚಿಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿಗಳ ಸಂಬಂಧಿಕರು ಹಾಗೂ ಸಹವರ್ತಿಗಳ ಬ್ಯಾಂಕ್ ಖಾತೆಗಳಿಗೆ ಹಣ ರವಾನಿಸಲಾಗಿದೆ ಎಂಬುದು ಇಡಿ ಪತ್ತೆ ಮಾಡಿತ್ತು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನ ಸಂಸ್ಥೆಗಳ ಮೇಲೆ ದಾಳಿ
ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಇಡಿ ಅಧಿಕಾರಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು. ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಕಾರ್ಯಾಚರಣೆ ಕೈಗೊಂಡು ಅಕ್ರಮ ಹಣ ವರ್ಗಾವಣೆ ಸಂಬಂಧ ಶೋಧ ಕೈಗೊಂಡರು. ಕಾಲೇಜು ದಾಖಲಾತಿಯಲ್ಲಿ ಅವ್ಯವಹಾರ ನಡೆದಿದ್ದು, ಅಕ್ರಮವಾಗಿ ಹಣ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಡಿಜಿಟಲ್ ದಾಖಲೆಗಳು ಸೇರಿದಂತೆ ದಾಖಲಾತಿಯ ಮಾಹಿತಿಯನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ
ವಾಲ್ಮೀಕಿ ಅಭಿವೃದ್ಧಿನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಅವರ ಆಪ್ತರು, ಶಾಸಕರಾದ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್, ಸಂಸದ ಇ-ತುಕಾರಾಂ ಸೇರಿದಂತೆ ಇತರರ ಮೇಲೆ ದಾಳಿ ನಡೆಸಿ ಶೋಧ ನಡೆಸಿತು. ಅಲ್ಲದೇ, ಯೂನಿಯನ್ ಬ್ಯಾಂಕ್ನ ಕೆಲ ಹಿರಿಯ ಅಧಿಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಲೋಕಸಭೆ ಉಪಚುನಾವಣೆ ವೇಳೆ ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದಿಂದ ಬಂದ ಹಣವನ್ನು ಮನಬಂದಂತೆ ಹಂಚಿಕೆ ಮಾಡಲಾಗಿದೆ. 94 ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಲಾಗಿದೆ. ಬಳ್ಳಾರಿ ಕ್ಷೇತ್ರದ ಚುನಾವಣೆಗಾಗಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. 94 ಕೋಟಿ ರೂಪಾಯಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಲ್ಲದೇ, ಆತನ ಆಪ್ತ ಸಂಬಂಧಿ ಎರ್ರಿಸ್ವಾಮಿ, ಮತ್ತೋರ್ವ ಆಪ್ತ ವಿಜಯ ಕುಮಾರ್ ನಿವಾಸಗಳಲ್ಲಿ ಶೋಧ ನಡೆಸಲಾಗಿತ್ತು.
ಶಾಸಕರು, ಸಂಸದರ ಮೇಲೆ ದಾಳಿ:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಇಡಿ ಬಂಧನಕ್ಕೊಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಇತ್ತೀಚೆಗೆ ಮತ್ತೊಮ್ಮೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್, ಸಂಸದ ಇ-ತುಕಾರಾಂ ನಿವಾಸದ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವೇಳೆ ನಿಗಮದ ಹಣ ಬಳಕೆ ಮಾಡಿಕೊಂಡಿರುವ ಆರೋಪದ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ನಿಗಮದ ಹಣವನ್ನು ಬಳಸಲಾಗಿದ್ದು, ಸುಮಾರು 20 ಕೋಟಿ ರೂಪಾಯಿಯನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಲಾಗಿದೆ ಎಂಬ ಆರೋಪದ ಮೇರೆಗೆ ಶೋಧ ನಡೆಸಲಾಯಿತು. ಬಳ್ಳಾರಿ ಚುನಾವಣೆಗೆ ಪ್ರತಿ ಮತದಾರರಿಗೆ 200 ರೂಪಾಯಿ ಹಂಚಿಕೆ ಆರೋಪದ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಲಾಯಿತು.
ವಿನಯ್ ಕುಲಕರ್ಣಿಗೆ ಐಶ್ವರ್ಯಾ ಕಂಟಕ
ಧಾರವಾಡ ಜಿಲ್ಲಾಪಂಚಾಯತ್ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಚಿನ್ನಾಭರಣ ವಂಚನೆ ಪ್ರಕರಣ ಆರೋಪಿ ಐಶ್ವರ್ಯಾಗೌಡ ಕಂಟಕವಾಗಿದ್ದಾರೆ. ಐಶ್ವರ್ಯಾಗೌಡ ಜೊತೆಗಿನ ನಂಟಿನ ಮೇರೆಗೆ ಇಡಿ ಅಧಿಕಾರಿಗಳು ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ನಡೆಸಿದರು. ಐಶ್ವರ್ಯಾಗೌಡಳಿಗೆ ಸೇರಿದ ಕಾರ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಸಮಸ್ಯೆ ಎದುರಾಯಿತು. ಅಲ್ಲದೇ, ಆಕೆಯೊಂದಿಗೆ ಹಣಕಾಸಿನ ವ್ಯವಹಾರಗಳನ್ನು ಹೊಂದಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಕೋಟ್ಯಂತರ ರು. ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಕಾರ್ಯಾಚರಣೆ ಕೈಗೊಂಡು ಇಡಿ ಅಧಿಕಾರಿಗಳು ಶೋಧ ನಡೆಸಿದರು.
ಡಿ.ಕೆ. ಸುರೇಶ್ಗೂ ಇಡಿ ವಿಚಾರಣೆ
ಐಶ್ವರ್ಯಾ ಗೌಡ , ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಅನೇಕರಿಗೆ ವಂಚಿಸಿದ್ದಾರೆ ಎಂಬ ಆರೋಪ ಇದೆ. ಅಷ್ಟೇ ಅಲ್ಲದೆ, ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ನಂಬಿಸಿ ಹಲವು ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಮೋಸ ಮಾಡಿದ್ದಾರೆ ಎಂಬುವುದು ಆರೋಪವಾಗಿದೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಎಂಬುವವರು ಈ ಬಗ್ಗೆ ದೂರು ನೀಡಿದ್ದರು. ಐಶ್ವರ್ಯಾ ಗೌಡ ಅವರು ಸಾಲದ ರೂಪದಲ್ಲಿ ಸುಮಾರು 9.82 ಕೋಟಿ ರೂ. ಮೌಲ್ಯದ ಚಿನ್ನವನ್ನು ಪಡೆದು ವಂಚಿಸಿದ್ದಾರೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.
ಕೋಟ್ಯಂತರ ರು. ಅವ್ಯವಹಾರ ಹಿನ್ನೆಲೆಯಲ್ಲಿ ಇಡಿ ಪ್ರಕರಣದಲ್ಲಿ ಪ್ರವೇಶಿಸಿ ತನಿಖೆ ಕೈಗೊಂಡಿತ್ತು. ಐಶ್ವರ್ಯಾಗೌಡ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಆಕೆಯನ್ನುಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ವಿಚಾರಣೆ ವೇಳೆ ಐಶ್ವರ್ಯಾಗೌಡ ನೀಡಿದ ಮಾಹಿತಿ ಮೇರೆಗೆ ಡಿ.ಕೆ.ಸುರೇಶ್ಗೆ ನೊಟೀಸ್ ನೀಡಿದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಕ್ರೋಢೀಕರಿಸಿದ್ದಾರೆ ಹಾಗೂ ಈಗಾಗಲೇ ವಿಚಾರಣೆ