ದಕ್ಷಿಣ ಕನ್ನಡ ಸರಣಿ ಕೊಲೆ ಪ್ರಕರಣ: ಶನಿವಾರ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಪರಮೇಶ್ವರ್ ಭೇಟಿ

ಕರಾವಳಿಯಲ್ಲಿ ಕೋಮು ಆಧರಿತ ಘರ್ಷಣೆ, ಹತ್ಯೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ಮಂಗಳೂರಿಗೆ ಭೇಟಿ ನೀಡಲಿದ್ದು, ಶಾಂತಿ ಸಭೆಗಳನ್ನು ನಡೆಸಲಿದ್ದಾರೆ.;

Update: 2025-05-30 07:00 GMT

ಜಿ.ಪರಮೇಶ್ವರ್‌ ಹಾಗೂ ದಿನೇಶ್‌ ಗುಂಡೂರಾವ್‌ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಪರಿಸ್ಥಿತಿ ಪರಿಶೀಲಿಸಲು ಮತ್ತು ಶಾಂತಿ ಸ್ಥಾಪಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಶನಿವಾರ (ಮೇ 31) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ ಸಭೆ ನಡೆಸಿ, ಕೂಡಲೇ ಮಂಗಳೂರಿಗೆ ತೆರಳಿ ಶಾಂತಿ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ಕೋಮುಗಲಭೆಗಳು ತೀವ್ರಗೊಂಡಿದ್ದು, ಇದು ಸರಣಿ ಕೊಲೆಗಳಿಗೆ ಕಾರಣವಾಗಿದೆ. ಈ ಹಿಂದೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ನಡೆದಿತ್ತು. ಇದಕ್ಕೆ ಪ್ರತೀಕಾರ ಎಂಬಂತೆ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಅಬ್ದುಲ್ ರಹಿಮಾನ್ ಕೊಲೆಗೆ ಮುಸ್ಲಿಂ ಸಮುದಾಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸರಣಿ ಕೊಲೆಗಳನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆ ವೈಫಲ್ಯ ಕಂಡಿದೆ ಮತ್ತು ಜಿಲ್ಲೆಯಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಸಮುದಾಯ ಆರೋಪಿಸಿದೆ.

ಕಾಂಗ್ರೆಸ್ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ

ಈ ಬೆಳವಣಿಗೆಗಳ ಮಧ್ಯೆ, ಗುರುವಾರ ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದರು. ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು ಸಮುದಾಯಕ್ಕೆ ಆಗಿರುವ ಅನ್ಯಾಯ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಿದ್ದಂತೆ, ಕಾರ್ಯಕರ್ತರು ವೇದಿಕೆಗೆ ನುಗ್ಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ.

ಸಿಎಂ ಸಿದ್ದರಾಮಯ್ಯರಿಂದ ತುರ್ತು ಸಭೆ

ಕಾಂಗ್ರೆಸ್ ಪಕ್ಷದೊಳಗಿನ ಈ ರಾಜೀನಾಮೆ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಮಂಗಳೂರಿನಲ್ಲಿ ತಕ್ಷಣವೇ ಶಾಂತಿ ಸಭೆಗಳನ್ನು ನಡೆಸಲು ಉಸ್ತುವಾರಿ ಮತ್ತು ಗೃಹ ಸಚಿವರಿಗೆ ಸೂಚಿಸಿದೆ. ನಿನ್ನೆಯಷ್ಟೇ (ಬುಧವಾರ) ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಕೋಮು ಗಲಭೆಗಳ ಬಗ್ಗೆ ಚರ್ಚೆ ನಡೆಸಿದ್ದರು. 

Tags:    

Similar News