ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ; ಮುಂದಿನ ಗುರಿ ಕೆಎಂಎಫ್ ಅಧ್ಯಕ್ಷಗಾದಿ?
2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸೋಲು ಕಂಡಿದ್ದರು. ಇತ್ತೀಚೆಗೆ ಬಮೂಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.;
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋದರ ಡಿ.ಕೆ. ಸುರೇಶ್ ಅವರು ಕೆಎಂಎಫ್ ಅಧ್ಯಕ್ಷ ಗಾದಿಗೇರುವ ಹಾದಿ ಸುಗಮವಾಗಿದೆ. ಬಮೂಲ್ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದ ಡಿ.ಕೆ. ಸುರೇಶ್ ಅವರ ಮುಂದಿನ ಚಿತ್ತ, ಕೆಎಂಎಫ್ ಅಧ್ಯಕ್ಷ ಗಾದಿಯ ಮೇಲೆ ನೆಟ್ಟಿದೆ ಎಂದು ವಿಶ್ಲೇಷಿಸಲಾಗಿದೆ.
ಜುಲೈ ಮೊದಲ ವಾರದಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ಇಂಗಿತದಿಂದಲೇ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾದ ಡಿ.ಕೆ. ಸುರೇಶ್ ಅವರು ಈಗ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಹಾದಿ ತೀವ್ರ ಕುತೂಹಲ ಕೆರಳಿಸಿದೆ.
ಬಮೂಲ್ನಲ್ಲಿ ಡಿ.ಕೆ.ಸುರೇಶ್ ಪಾರುಪತ್ಯ
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮತ್ತು ರಾಮನಗರ ಜಿಲ್ಲೆಗಳ ಸಹಕಾರಿ ಹಾಲು ಒಕ್ಕೂಟದ (ಬಮೂಲ್) ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಹಾಲು ಒಕ್ಕೂಟದಲ್ಲಿ ಪ್ರಾಬಲ್ಯ ಸಾಧಿಸಲು ಮುಂದಾಗಿದ್ದಾರೆ.
ಈ ಹಿಂದೆ ಎಚ್.ಡಿ. ರೇವಣ್ಣ ಹಿಡಿತದಲ್ಲಿದ್ದ ಹಾಲು ಒಕ್ಕೂಟದ ಅಧಿಕಾರವನ್ನು ಈಗ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಒಂದೊಂದೇ ಹೆಜ್ಜೆ ಇಡುತ್ತಿದ್ದಾರೆ. ಆರಂಭಿಕ ಹೆಜ್ಜೆಯಲ್ಲಿ ಯಶಸ್ಸನ್ನೂ ಕಂಡಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಡಿ.ಕೆ ಸುರೇಶ್ ಅವರು, ಕೆಲ ಕಾಲ ರಾಜಕೀಯದಿಂದ ವಿರಾಮ ತೆಗೆದುಕೊಂಡಿದ್ದರು. ಬಳಿಕ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯದ ಮೇರೆಗೆ ಬಮೂಲ್ ಪ್ರವೇಶಿಸಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರೈತರು ಹಾಗೂ ಸಹಕಾರ ಸಂಘದ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ನಂಬಿಕೆಗೆ ಹೊಣೆಗಾರನಾಗಿ ಕೆಲಸ ಮಾಡುತ್ತೇನೆ. ಹೈನುಗಾರಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತೇನೆ. ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ರೈತರಿಗೆ ಸೌಲಭ್ಯ ಕಲ್ಪಿಸುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು," ಎಂದು ತಿಳಿಸಿದ್ದಾರೆ.
ಬಮೂಲ್ನಲ್ಲಿ ಒಟ್ಟು 14 ನಿರ್ದೇಶಕರ ಪೈಕಿ 11 ಮಂದಿ ಕಾಂಗ್ರೆಸ್ ಬೆಂಬಲಿತರು ಇದ್ದ ಕಾರಣ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ ಸುಲಭವಾಯಿತು.