Internal Reservation | ಒಳ ಮೀಸಲಾತಿ ಜಾರಿಯಾಗುವವರೆಗೂ ಹೊಸ ನೇಮಕಾತಿ ಬಂದ್; ಸುತ್ತೋಲೆ ಹೊರಡಿಸಿದ ಡಿಪಿಎಆರ್
2024ರ ನ. 25ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಕೆಲ ನೇಮಕಾತಿ ಪ್ರಾಧಿಕಾರಗಳು ಸರ್ಕಾರದ ಆದೇಶ ಉಲ್ಲಂಘಿಸಿ ಹೊಸ ಅಧಿಸೂಚನೆ ಹೊರಡಿಸಿದ್ದವು. ಈ ಹಿನ್ನೆಲೆಯಲ್ಲಿ ಮ,ತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.;
ಒಳ ಮೀಸಲಾತಿ ಅನ್ವಯ ವಿವಿಧ ವೃಂದದ ಹುದ್ದೆಗಳಿಗೆ ಯಾವುದೇ ಹೊಸತಾಗಿ ನೇಮಕಾತಿಗೆ ಅಧಿಸೂಚನೆ ಹೊರಡಿಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.
2024ರ ನ. 25ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಕೆಲ ನೇಮಕಾತಿ ಪ್ರಾಧಿಕಾರಗಳು ಸರ್ಕಾರದ ಆದೇಶ ಉಲ್ಲಂಘಿಸಿ ಹೊಸ ಅಧಿಸೂಚನೆ ಹೊರಡಿಸಿದ್ದವು. ಈ ಕುರಿತು ಮಾಜಿ ಸಚಿವ ಎಚ್.ಆಂಜನೇಯ, ದಲಿತ ಹೋರಾಟಗಾರ ಬಿ.ಆರ್. ಭಾಸ್ಕರ ಪ್ರಸಾದ್ ಅವರು ಮುಖ್ಯಕಾಯದರ್ಶಿಯನ್ನು ಭೇಟಿ ಮಾಡಿ ದೂರು ನೀಡಿದ್ದರು. ಸರ್ಕಾರದ ಸುತ್ತೋಲೆ ಉಲ್ಲಂಘಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಿರುವ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಬರುವವರೆಗೆ ಯಾವುದೇ ಹೊಸ ನೇಮಕಾತಿ ನಡೆಸದಿರಲು ರಾಜ್ಯ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಇದರ ಆಧಾರದ ಮೇಲೆ 2024 ನ. 25ರಂದು ಡಿಎಪಿಆರ್ ಸುತ್ತೋಲೆ ಹೊರಡಿಸಿತ್ತು. ರಾಜ್ಯ ನಾಗರಿಕ ಸೇವೆಗಳ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಯಾವುದೇ ಅಧಿಸೂಚನೆ ಹೊರಡಿಸಬಾರದು ಎಂದು ತಾಕೀತು ಮಾಡಿತ್ತು.
ಮುಖ್ಯ ಕಾರ್ಯದರ್ಶಿ ಶಾಲಿ ರಜನೀಶ್ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಎಚ್. ಆಂಜನೇಯ ಹಾಗೂ ದಲಿತ ಹೋರಾಟಗಾರ ಬಿ.ಆರ್. ಭಾಸ್ಕರ ಪ್ರಸಾದ್ ಅವರು ಒಳ ಮೀಸಲಾತಿ ಜಾರಿಯಾಗುವವರೆಗೆ ಹೊಸ ನೇಮಕಾತಿ ಮತ್ತು ಬಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಮತ್ತೊಮ್ಮೆ ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಿದ್ದರು. ಅದರಂತೆ ಡಿಪಿಎಆರ್ ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.