ಎತ್ತಿನಹೊಳೆ ನೀರು ಮೊದಲು ಕುಡಿಯುವ ನೀರಿಗಷ್ಟೇ...
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗಲಿರುವ ಈ ಸಮತೋಲಿತ ಜಲಾಶಯದ ಹಿನ್ನೆಲೆಯಲ್ಲಿ, ತಾಲ್ಲೂಕಿಗೆ ವಿಶೇಷ ಆದ್ಯತೆ ನೀಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.;
ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯದ ಸ್ಥಳವನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಯೋಜನೆಯಲ್ಲಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ತಾಲ್ಲೂಕುಗಳಿಗೆ 14 ಟಿಎಂಸಿ ಅಡಿ ಕುಡಿಯುವ ನೀರನ್ನು ಪೂರೈಸಲಾಗುವುದು. ನಂತರವಷ್ಟೇ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗಲಿರುವ ಈ ಸಮತೋಲಿತ ಜಲಾಶಯದ ಹಿನ್ನೆಲೆಯಲ್ಲಿ, ತಾಲ್ಲೂಕಿಗೆ ವಿಶೇಷ ಆದ್ಯತೆ ನೀಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಸುತ್ತಮುತ್ತಲಿನ ಐದಾರು ಜಿಲ್ಲೆಗಳಿಗೆ ನೀರು ಒದಗಿಸಲು ಗ್ರಾಮಸ್ಥರು ನೀಡುತ್ತಿರುವ ಸಹಕಾರವನ್ನು ಶ್ಲಾಘಿಸಿದರು. ಇದಕ್ಕೆ ಪ್ರತಿಯಾಗಿ, ಸಾಧ್ಯವಾದಷ್ಟು ಪರಿಹಾರವನ್ನು ಒದಗಿಸುವುದಾಗಿ ತಿಳಿಸಿದರು. ಗ್ರಾಮಸ್ಥರ ಮನವಿಯಂತೆ, ಸರ್ಕಾರಿ ಜಾಗದಲ್ಲಿ ಗ್ರಾಮಗಳ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸಲಿದೆ ಎಂದು ಡಿಸಿಎಂ ಹೇಳಿದರು.
ದುರ್ವಾಸನೆ ಮುಕ್ತ ಕಸ ವಿಲೇವಾರಿಗೆ ಹೊಸ ತಂತ್ರಜ್ಞಾನ
ಕಸ ವಿಲೇವಾರಿ ಸಮಸ್ಯೆಯ ಕುರಿತು ಗ್ರಾಮಸ್ಥರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಈ ಬಗ್ಗೆ ದೆಹಲಿ, ಚೆನ್ನೈ, ಹೈದರಾಬಾದ್ ನಗರಗಳಲ್ಲಿ ಅಧ್ಯಯನ ನಡೆಸಲಾಗಿದೆ ಎಂದು ತಿಳಿಸಿದರು. ಹೊಸ ಮಾದರಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುವುದು. ಇಲ್ಲಿ ಒಂದು ದಿನ ಸಂಗ್ರಹವಾದ ಕಸವನ್ನು ಮೂರು ದಿನಗಳಲ್ಲಿ ಸುಟ್ಟು ವಿಲೇವಾರಿ ಮಾಡಲಾಗುವುದು. ಈಗಿನಂತೆ ಕಸವನ್ನು ತಂದು ರಾಶಿ ಹಾಕಿ ಸುರಿಯುವ ವಿಧಾನಕ್ಕೆ ಬದಲಾಗಿ, ಈ ಕಸದಿಂದ ವಿದ್ಯುತ್ ಮತ್ತು ಅನಿಲವನ್ನು ಉತ್ಪಾದಿಸಲಾಗುವುದು ಎಂದರು.
ಕೇವಲ 10 ಎಕರೆ ಜಾಗದೊಳಗೆ ಇಡೀ ಕಸವನ್ನು ದುರ್ವಾಸನೆ ರಹಿತವಾಗಿ ವಿಲೇವಾರಿ ಮಾಡುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ಇದು ರಾಜ್ಯದಲ್ಲಿನ ಕಸ ಸಮಸ್ಯೆಗೆ ಪರಿಹಾರ ನೀಡಲಿದೆ. ಬೆಂಗಳೂರು ನಗರ ಸೇರಿದಂತೆ ಗುಡ್ಡಗಳ ಪಕ್ಕ ಖಾಸಗಿ ಜಮೀನು ದೊರೆತರೆ, ಅದನ್ನು ಖರೀದಿಸಿ ಕಸ ವಿಲೇವಾರಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನಲ್ಲಿ ಈ ಪ್ರಯೋಗವನ್ನು ಮೊದಲು ಪ್ರಾರಂಭಿಸಿ, ದುರ್ವಾಸನೆ ಮುಕ್ತ ಕಸ ವಿಲೇವಾರಿ ಕೇಂದ್ರಗಳಿಂದ ಜನರಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಕೊಳಚೆ ನೀರು ಹರಿಯುವುದನ್ನು ತಡೆಯಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಮತ್ತೊಂದು ದಿನ ದೊಡ್ಡಬಳ್ಳಾಪುರಕ್ಕೆ ಬಂದು ಚರ್ಚಿಸುವುದಾಗಿ ತಿಳಿಸಿದರು.