ಗಣಪತಿ ಆತ್ಮಹತ್ಯೆ ಪ್ರಕರಣ| ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂ:‌ ಸಚಿವ ಜಾರ್ಜ್‌ಗೆ ರಿಲೀಫ್

Update: 2024-08-27 13:03 GMT

ಡಿವೈಎಸ್‌ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಈ ಮೂಲಕ ಕೆ.ಜೆ ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ತನಿಖೆ ನಡೆಸಿದ ಬಳಿಕ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ವರದಿ ನೀಡಿದ್ದವು. ಬಳಿಕ ಹೈಕೋರ್ಟ್​ ಸಹ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮಂಗಳವಾರ (ಆಗಸ್ಟ್ 27) ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ.

ಪ್ರಕರಣದ ಹಿನ್ನೆಲೆ:

ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ ಅವರು ಮೂಲತಃ ಕೊಡಗಿನವರು. 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.

Tags:    

Similar News