ಬೆಳಗಾವಿ ಅಧಿವೇಶನವನ್ನು ಒಂದು ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ. ಖಾದರ್‌ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಪತ್ರ

ರಾಜ್ಯದ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲು ಶಾಸಕರಿಗೆ ಪೂರ್ಣಾವಧಿ ಸಿಗುತ್ತಿಲ್ಲ ಎಂದು ಅಶೋಕ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Update: 2025-12-15 13:11 GMT

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು, ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಬಾಕಿ ಇರುವ ಪಡಿತರ ಚೀಟಿ ವಿತರಣೆಯಂತಹ ಗಂಭೀರ ವಿಷಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲು ಸಮಯದ ಕೊರತೆಯಿದ್ದು, ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸುವಂತೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಡಿಸೆಂಬರ್ 9 ರಿಂದ 19 ರವರೆಗೆ ನಿಗದಿಯಾಗಿದ್ದ ಅಧಿವೇಶನವು ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ಇದರಿಂದಾಗಿ ರಾಜ್ಯದ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲು ಶಾಸಕರಿಗೆ ಪೂರ್ಣಾವಧಿ ಸಿಗುತ್ತಿಲ್ಲ ಎಂದು ಅಶೋಕ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಶೋಕ ಅವರು ಪತ್ರದಲ್ಲಿ ಪ್ರಸ್ತಾಪಿಸಿರುವ ಪ್ರಮುಖ ಅಂಶಗಳು

ಉತ್ತರ ಕರ್ನಾಟಕದ ಸಮಸ್ಯೆಗಳು: ಉತ್ತರ ಕರ್ನಾಟಕ ಭಾಗದ ಶಾಸಕರು ಪ್ರಸ್ತಾಪಿಸಿರುವ ಹಲವಾರು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ಇನ್ನೂ ಸಮರ್ಪಕ ಉತ್ತರ ನೀಡಬೇಕಿದೆ. ಈ ಭಾಗದ ಅಭಿವೃದ್ಧಿ ಮತ್ತು ಸಮಸ್ಯೆಗಳ ಚರ್ಚೆ ಅಪೂರ್ಣವಾಗಿದೆ.

ಕಾನೂನು ಸುವ್ಯವಸ್ಥೆ ಮತ್ತು ಅನುದಾನ: ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳಲ್ಲಿನ ಅನುದಾನ ಬಳಕೆಯ ಕಳಪೆ ಸಾಧನೆಯ ಕುರಿತು ಸುದೀರ್ಘ ಚರ್ಚೆಯ ಅಗತ್ಯವಿದೆ.

ಪಡಿತರ ಚೀಟಿ ಸಮಸ್ಯೆ: ರಾಜ್ಯಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅತಿ ಹೆಚ್ಚು ಅರ್ಜಿಗಳು ಬಂದಿದ್ದು, ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ. ಈ ಸಮಸ್ಯೆಗೆ ಅಧಿವೇಶನದಲ್ಲಿ ಪರಿಹಾರ ಕಂಡುಕೊಳ್ಳಬೇಕಿದೆ.

ಅಧಿವೇಶನದ ಅವಧಿ ಸೀಮಿತವಾಗಿರುವುದರಿಂದ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಲು ಶಾಸಕರಿಗೆ ಹೆಚ್ಚಿನ ಸಮಯಾವಕಾಶದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವ ಬಗ್ಗೆ ಕೂಡಲೇ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಸ್ಪೀಕರ್ ಅವರನ್ನು ಒತ್ತಾಯಿಸಿದ್ದಾರೆ. 

Tags:    

Similar News