ಅರಣ್ಯ ಒತ್ತುವರಿ | ಅಕ್ರಮ ಬಡಾವಣೆ, ರೆಸಾರ್ಟ್, ಹೋಂ ಸ್ಟೇ, ತೋಟ ತೆರವಿಗೆ ಸಚಿವ ಖಂಡ್ರೆ ಖಡಕ್ ಸೂಚನೆ

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವರು ಆದೇಶಿಸಿದ್ದಾರೆ

Update: 2024-08-02 11:12 GMT

ನೆರೆಯ ಕೇರಳದ ವಯನಾಡಿನ ಭೀಕರ ಭೂಕುಸಿತ ಘಟನೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಅರಣ್ಯ ಸಚಿವರು, ʻʻರಾಜ್ಯದ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ" ಎಂದು ಇಲಾಖೆಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಇಲಾಖೆಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, "ಶಿರೂರು, ವಯನಾಡ್ ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆ ಗಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.



ʻʻರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ಎಚ್ಚರಿಕೆಯ ಗಂಟೆಯಾಗಿವೆʼʼ ಎಂದು ಎಚ್ಚರಿಸಿದ್ದಾರೆ.

ʻʻಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂ ಸ್ಟೇ, ರಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆʼʼ ಎಂದು ಹೇಳಿದ್ದಾರೆ.

ʻʻಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆʼʼ ಎಂದಿದ್ದಾರೆ.

ʻʻಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತ್ ಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತ ಸಲ್ಲಿಸಲು ಈ ಮೂಲಕ ಸೂಚಿಸಿದೆ" ಎಂದು ಟಿಪ್ಪಣಿಯಲ್ಲಿ ಆದೇಶಿಸಿದ್ದಾರೆ.


Tags:    

Similar News