Kasturirangan Passes Away | ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ವಿಧಿವಶ
ಕಸ್ತೂರಿ ರಂಗನ್ ಅವರು 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ.;
ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ವಿಧಿವಶರಾಗಿದ್ದಾರೆ.
ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪುರಸ್ಕೃತರಾದ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (84) ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಕೊನೆಯುಸಿರು ಎಳೆದಿದ್ದಾರೆ.
ಕಸ್ತೂರಿ ರಂಗನ್ ಅವರು 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ.
ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ, ಎನ್ಐಐಟಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಆಗಿದ್ದರು. ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕಸ್ತೂರಿ ರಂಗನ್ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ
ಕಸ್ತೂರಿ ರಂಗನ್ ನಿಧನಕ್ಕೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು.
ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ.
ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಸಂತಾಪ ಸೂಚಿಸಿದ ಹೆಚ್ ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಸ್ತೂರಿ ರಂಗನ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಭಾರತದ ಹೆಮ್ಮೆಯ ಪುತ್ರ, ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ ವಿಶ್ರಾಂತ ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಸಮಿತಿ ಅಧ್ಯಕ್ಷರೂ ಆಗಿದ್ದ ಪದ್ಮವಿಭೂಷಣ ಡಾ. ಕಸ್ತೂರಿ ರಂಗನ್ ಅವರ ನಿಧನದ ವಾರ್ತೆ ಕೇಳಿ ನನಗೆ ಅತೀವ ದುಃಖ ಉಂಟಾಯಿತು.
ಅವರ ಜತೆ ನನಗೆ ಆತ್ಮೀಯ ಬಾಂಧವ್ಯವಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಅವರು ನೀಡಿದ ಮಾರ್ಗದರ್ಶನ, ಸಲಹೆ, ಸಹಕಾರವನ್ನು ನಾನೆಂದಿಗೂ ಮರೆಯಲಾರೆ. ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು.
ಅವರು ಬೆಂಗಳೂರು ನಗರದ ಜತೆ ಭಾವನಾತ್ಮಕ ಬೆಸುಗೆ ಹೊಂದಿದ್ದರು. ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು. ರಾಜ್ಯಸಭೆ ಸದಸ್ಯರಾಗಿ ದೇಶದ ಮಹತ್ವಪೂರ್ಣ ನೀತಿಗಳನ್ನು ರೂಪಿಸುವಲ್ಲಿಯೂ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರ ಅಗಲಿಕೆ ರಾಷ್ಟ್ರಕ್ಕೆ ಬಹುದೊಡ್ಡ ನಷ್ಟ. ಅಗಲಿದ ಶ್ರಿಯುತರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರು, ಅಭಿಮಾನಿ ವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.