Illegal Mining Case | ಸಿಬಿಐ ನ್ಯಾಯಾಲಯದ ತೀರ್ಪಿಗೆ ಹೈಕೋರ್ಟ್ ತಡೆ; ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಇತ್ತೀಚೆಗಷ್ಟೇ ನ್ಯಾಂಪಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯವು ಅಕ್ರಮ ಗಣಿಗಾರಿಕೆ ಪ್ರಕರಣದ ಎಲ್ಲಾ ಅಪರಾಧಿಗಳಿಗೆ ತಲಾ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಸಿಬಿಐ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಲಿ ಜನಾರ್ದನ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದರು.;
ಜನಾರ್ಧನ ರೆಡ್ಡಿ
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಅಪರಾಧಿಯಾಗಿ ಜೈಲುವಾಸ ಅನುಭವಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಬುಧವಾರ ಜಮೀನು ಮಂಜೂರು ಮಾಡಿದೆ.
ಇತ್ತೀಚೆಗಷ್ಟೇ ನ್ಯಾಂಪಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯವು ಅಕ್ರಮ ಗಣಿಗಾರಿಕೆ ಪ್ರಕರಣದ ಎಲ್ಲಾ ಅಪರಾಧಿಗಳಿಗೆ ತಲಾ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಸಿಬಿಐ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಲಿ ಜನಾರ್ದನ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಿಬಿಐ ನ್ಯಾಯಾಲಯದ ತೀರ್ಪನ್ನು ಅಮಾನತಿನಲ್ಲಿಟ್ಟಿದ್ದು, ಜನಾರ್ದನ ರೆಡ್ಡಿ , ಅವರ ಆಪ್ತ ಸಹಾಯಕರಾದ ಅಲಿ ಖಾನ್, ಬಿ.ವಿ. ಶ್ರೀನಿವಾಸ್ ರೆಡ್ಡಿ ಹಾಗೂ ರಾಜಗೋಪಾಲ್ಗೆ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರಾತಿಯ ವೇಳೆ ಹೈಕೋರ್ಟ್ ಹಲವು ಷರತ್ತುಗಳನ್ನೂ ವಿಧಿಸಿದೆ. ಅಪರಾಧಿಗಳು ದೇಶ ಬಿಟ್ಟು ಹೋಗಬಾರದು. ಪ್ರತಿಯೊಬ್ಬರೂ ತಲಾ 10 ಲಕ್ಷ ರೂ ವೈಯಕ್ತಿಕ ಭದ್ರತೆ ಒದಗಿಸಬೇಕು ಎಂದು ನಿರ್ದೇಶಿಸಿದೆ.
ನ್ಯಾಂಪಲ್ಲಿ ಸಿಬಿಐ ನ್ಯಾಯಾಲಯವು ಮೇ 6 ರಂದು ನೀಡಿದ್ದ ತೀರ್ಪಿನಲ್ಲಿ ನಾಲ್ವರು ಆರೋಪಿಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 20,000 ರೂ.ದಂಡ ವಿಧಿಸಿತ್ತು. ಮಾಜಿ ಸರ್ಕಾರಿ ಅಧಿಕಾರಿಯಾದ ವಿ.ಡಿ. ರಾಜಗೋಪಾಲ್ ಗೆ ನಾಲ್ಕು ವರ್ಷಗಳ ಹೆಚ್ಚುವರಿ ಶಿಕ್ಷೆ ವಿಧಿಸಿತ್ತು.
ಸಿಬಿಐ ನ್ಯಾಯಾಲಯ ಪ್ರಕಟಿಸಿರುವ ಶಿಕ್ಷೆ ಅಮಾನತು ಮಾಡುವಂತೆ ಕೋರಿ ಗಾಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿತ್ತು. ಹಿರಿಯ ವಕೀಲರಾದ ಬಿ. ನಳಿನ್ ಕುಮಾರ್ ಮತ್ತು ನಾಗಮುತ್ತು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದರು. ಅರ್ಜಿದಾರರು ಈಗಾಗಲೇ ಮೂರುವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವೂ ರದ್ದಾಗಿದೆ. ಹಾಗಾಗಿ ಶಿಕ್ಷೆಯನ್ನು ಅಮಾನತು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.
ಶಾಸಕ ಸ್ಥಾನದಿಂದ ಅನರ್ಹ
ಸಿಬಿಐ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯವರು ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಅಲ್ಲದೇ ತೆರವಾಗಿರುವ ಶಾಸಕ ಸ್ಥಾನ ಭರ್ತಿಗೆ ಚುನಾವಣೆ ಅಧಿಸೂಚನೆ ಬಿಡುಗಡೆ ಮಾಡಿದರೆ ಅರ್ಜಿದಾರರು ಸಾಕಷ್ಟು ನಷ್ಟ ಅನುಭವಿಸುತ್ತಾರೆ ಎಂದು ಜನಾರ್ದನ ರೆಡ್ಡಿ ಪರ ವಕೀಲರು ವಾದ ಮಂಡಿಸಿದರು. ತಮ್ಮ ಕಕ್ಷಿದಾರರಾದ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ನೀಡಬೇಕೆಂದು ಕೋರಿ ಅಫ್ಜಲ್ ಅಲಿ ಖಾನ್ ಮತ್ತು ರಾಹುಲ್ ಗಾಂಧಿ, ನವಜೋತ್ ಸಿಂಗ್ ಸಿಧು ಸದಸ್ಯತ್ವ ರದ್ದತಿ ಪ್ರಕರಣಗಳನ್ನು ಉಲ್ಲೇಖಿಸಿದ್ದರು.
ಮಂಗಳವಾರ ನಡೆದ ವಾದ ವಿವಾದಗಳನ್ನು ಆಲಿಸಿದ್ದ ನ್ಯಾಯಪೀಠ, ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು, ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದರು.