ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣಕ್ಕೆ ಸರ್ಕಾರ ಒತ್ತು: ಸಚಿವ ಜಮೀರ್ ಅಹಮದ್
ಅಲ್ಪಸಂಖ್ಯಾತ ಇಲಾಖೆಗೆ ನೀಡಿರುವ ಬಜೆಟ್ ಪೈಕೆ ಶೇ. 65 ರಿಂದ 70 ರಷ್ಟು ಹಣವನ್ನು ಶಿಕ್ಷಣಕ್ಕೆ ವಿನಿಯೋಗಿಸುತ್ತಿದ್ದೇವೆ. ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮವಸ್ತ್ರ, ಶೂ ಸೇರಿದಂತೆ ಮೂಲ ಸೌಕರ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು.
ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಸಚಿವ ಜಮೀರ್ ಅಹಮದ್ ಪುಷ್ಪಾರ್ಚನೆ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ವೃತ್ತಿಪರ ತರಬೇತಿ ನೀಡಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಮಂಗಳವಾರ (ನ.11) ದೇವರಾಜ ಅರಸು ಭವನದಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಗೆ ನೀಡಿರುವ ಬಜೆಟ್ ಪೈಕೆ ಶೇ. 65 ರಿಂದ 70 ರಷ್ಟು ನಾವು ಶಿಕ್ಷಣಕ್ಕೆ ವಿನಿಯೋಗಿಸುತ್ತಿದ್ದೇವೆ. ಇಲಾಖೆ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮವಸ್ತ್ರ, ಶೂ, ಮೂಲ ಸೌಕರ್ಯ ಸೇರಿ ಸಮರ್ಪಕ ಸೌಲಭ್ಯ ಒದಗಿಸಿ ಮಕ್ಕಳು ನೆಮ್ಮದಿಯಿಂದ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಾಗಿ ಆಚರಿಸುತ್ತಿರುವ ಈ ಸಂದರ್ಭದಲ್ಲಿ ನಾವೆಲ್ಲರೂ ಅವರ ಕನಸು ನನಸು ಮಾಡಬೇಕು. ಗುಣಮಟ್ಟದ ಭೋದನೆ ಮೂಲಕ ಶಿಕ್ಷಣಕ್ಕೆ ಒತ್ತು ನೀಡುವುದೇ ಅವರಿಗೆ ನಾವು ಕೊಡುವ ಗೌರವ. ಇದರಲ್ಲಿ ಶಿಕ್ಷಕರ ಪಾತ್ರ ಹೆಚ್ಚು. ನಮ್ಮ ಇಲಾಖೆ ವ್ಯಾಪ್ತಿಯ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಗಳಲ್ಲಿ 2023 ರಲ್ಲಿ 1.20 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಇದೀಗ ಆ ಸಂಖ್ಯೆ 2.30 ಲಕ್ಷಕ್ಕೆ ಏರಿದೆ. ಮುಂದಿನ ಎರಡು ವರ್ಷಗಳಲ್ಲಿ 3.55 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದರು.
ಎಂಬಿಬಿಸ್ ಓದುವ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ವರ್ಷ 1605 ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹಜ್ ಭವನದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿದ್ದು, ಕಳೆದ ವರ್ಷ ತರಬೇತಿ ಪಡೆದ 400 ಅಭ್ಯರ್ಥಿಗಳಲ್ಲಿ 109 ಮಂದಿ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.