ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿ ; ಮೂವರು ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್ಐಆರ್
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ, ಇಬ್ಬರು ಸ್ವಾಮೀಜಿಗಳು ಸೇರಿ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.;
ತುಮಕೂರಿನ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬೆಂಗಳೂರು-ಶಿವಮೊಗ್ಗ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸಿದ್ದ ರಾಜಕೀಯ ನಾಯಕರು ಹಾಗೂ ರೈತ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಮುಖಂಡರಾದ ದಿಲೀಪ್ ಕುಮಾರ್, ಹೆಬ್ಬಾಕ ರವಿ ಹಾಗೂ ಇಬ್ಬರು ಸ್ವಾಮೀಜಿಗಳ ವಿರುದ್ಧ ಸೇರಿ 11 ಮಂದಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪ್ರಕರಣದಲ್ಲಿ ಸ್ವಾಮೀಜಿಗಳ ಹೆಸರು ಉಲ್ಲೇಖಿಸಿಲ್ಲ. ಇದರಲ್ಲಿ 10 ಸ್ವಯಂಪ್ರೇರಿತ ಪ್ರಕರಣಗಳಾಗಿವೆ. ಒಂದು ಗುತ್ತಿಗೆದಾರರು ನೀಡಿದ ದೂರಿನ ಮೇಲೆ ದಾಖಲಿಸಲಾಗಿದೆ. ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.
ಹೋರಾಟ ನಿಲ್ಲಲ್ಲ, ದೂರಿಗೆ ಹೆದರಲ್ಲ
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿಸಿ ರೈತರೊಂದಿಗೆ ನಡೆಸುತ್ತಿರುವ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಪೊಲೀಸರು ಎಷ್ಟೇ ಪ್ರಕರಣ ದಾಖಲಿಸಿದರೂ ನಾವು ಹೆದರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಈ ಮಧ್ಯೆ ಗುಬ್ಬಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಡಾ. ಎಚ್. ಡಿ. ರಂಗನಾಥ್ ಅವರು ಕೂಡ ಯೋಜನೆ ವಿರೋಧಿಸಿರುವುದು ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಜನರ ಅಭಿಪ್ರಾಯ ಏನಿದೆಯೋ ಅದೇ ನಮ್ಮ ಅಭಿಪ್ರಾಯ. ಮಾಗಡಿಗೆ ನೀರು ಬಿಡುವ ಪ್ರಮೇಯವೇ ಇಲ್ಲ, ಲಿಂಕ್ ಕೆನಾಲ್ ನೀರು ಕುಣಿಗಲ್ಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.
ತುಮಕೂರು ಜನರಿಗೆ ತೊಂದರೆ ಕೊಡಬೇಡಿ: ಸೋಮಣ್ಣ
ಕೆನಾಲ್ ಕಾಮಗಾರಿಗೆ ವಿರೋಧ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಕೋಟಿ ನಮಸ್ಕಾರ. ಯೋಜನೆಗೆ ಯಾಕೆ ಗಂಟು ಬಿದ್ದಿದ್ದಾರೋ ಗೊತ್ತಿಲ್ಲ. ತುಮಕೂರು ಜನರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾದಿದ್ದಾರೆ. ತಿಪ್ಪಗೊಂಡನಹಳ್ಳಿ, ಮಂಚನಬೆಲೆಯಿಂದ ಹೊಸ ಲೈನ್ ಹಾಕುವ ಮೂಲಕ ಕನಕಪುರಕ್ಕೂ ನೀರು ಬಿಟ್ಟುಕೊಳ್ಳಲಿ. ಯೋಜನೆ ಬಗ್ಗೆ ದೊಡ್ಡ ಬೋರ್ಡ್ ಹಾಕಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.
ಏನಿದು ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್?
ಹಾಸನ ಜಿಲ್ಲೆಯ ಹೇಮಾವತಿ ನದಿ, ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಗೆ ವರ್ಷಕ್ಕೆ 24 ಟಿಎಂಸಿ ನೀರು ಹಂಚಿಕೆ ಆಗಬೇಕು. ಆದರೆ, ಯಾವ ವರ್ಷವೂ 24 ಟಿಎಂಸಿ ನೀರು ಹಾಸನದಿಂದ ತುಮಕೂರಿಗೆ ಹರಿದಿಲ್ಲ. ಈ ಯೋಜನೆಯಡಿ ಗುಬ್ಬಿ ತಾಲ್ಲೂಕಿನ ಸಂಕಾಪುರದಿಂದ ಪೈಪ್ ಲೇನ್ನಲ್ಲಿ ಕುಣಿಗಲ್ ಮಾರ್ಗವಾಗಿ ಮಾಗಡಿಗೆ ನೀರು ಹರಿಸಲು ಎಕ್ಸ್ ಪ್ರೆಸ್ ಲಿಂಕ್ಜಿ ಕೆನಾಲ್ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆಗೆ ತುಮಕೂರು ಜಿಲ್ಲೆಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಗುಬ್ಬಿ, ಕುಣಿಗಲ್ ತಾಲ್ಲೂಕಿನಿಂದ ನೈಸರ್ಗಿಕವಾಗಿ ನಾಲೆಗಳ ಮೂಲಕವೇ ಮಾಗಡಿಗೆ ನೀರು ಹರಿಸಬೇಕು. ಅದನ್ನು ಬಿಟ್ಟು ದೊಡ್ಡ ಸ್ಟೀಲ್ ಪೈಪ್ ಬಳಸಿ ಕುಣಿಗಲ್ ಮೂಲಕ ಮಾಗಡಿಗೆ ನೀರು ಹರಿಸುವುದು ಬೇಡ. ಎಕ್ಸ್ಪ್ರೆಸ್ ಲಿಂಕ್ ಕೆನಾಲ್ನಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಸಿಗದಂತೆ ಆಗಲಿದೆ ಎಂಬುದು ರೈತರ ಆತಂಕವಾಗಿದೆ.
ಕುಮಾರಸ್ವಾಮಿ ಅವಧಿಯಲ್ಲಿ ಯೋಜನೆಗೆ ಆದೇಶ
ಹೇಮಾವತಿ ಲಿಂಕಿಂಗ್ ಕೆನಾಲ್ ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಎಚ್. ಡಿ ಕುಮಾರಸ್ವಾಮಿ ಅವರು ಆದೇಶ ಮಾಡಿದ್ದರು. ಯೋಜನೆಗೆ 600 ಕೋಟಿ ರೂ. ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು.
2023ರ ವಿಧಾನಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನನೆಗುದಿಗೆ ಬಿದ್ದಿದ್ದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಮರು ಜೀವ ನೀಡಿದರು. ಕಾಮಗಾರಿ ವೆಚ್ಚವು 900 ಕೋಟಿ ರೂ. ಗಳಿಗೆ ಏರಿಕೆಯಾಯಿತು.
ನ್ಯಾಯಾಧಿಕರಣದಲ್ಲೇನೀರಿನ ಹಂಚಿಕೆ
ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ಹೇಮಾವತಿ ನಾಲಾ ವಲಯ ಮತ್ತು ತುಮಕೂರಿಗೆ ಒಟ್ಟು 25.31 ಟಿಎಂಸಿ ನೀರು ನಿಗದಿಯಾಗಿದೆ. ಅದರಂತೆ ನಾಲಾ ವಲಯದಲ್ಲಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಹಂಚಿಕೆಯಾಯಾಗಿದೆ. ಇದರಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ 66 ಕೆರೆಗಳಿಗೆ ನೀರು ತುಂಬಿಸುವುದು ಸಹ ಸೇರಿದೆ.
ಹಾಗಾಗಿ ಮಾಗಡಿಗೆ ನೀರು ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದು ಸರ್ಕಾರದ ವಾದವಾಗಿದೆ.