ಇಬ್ರಾಹಿಂ ಉಚ್ಚಾಟನೆ | ಕುಮಾರಸ್ವಾಮಿ, ದೇವೇಗೌಡರಿಗೆ ಹೈಕೋರ್ಟ್‌ ನೋಟೀಸ್

Update: 2024-05-10 07:58 GMT

ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಿರುವ ಪ್ರಕರಣಕ್ಕೆ ಸಂಂಬಂಧಿಸಿದಂತೆ ಇದೀಗ ಹೈಕೋರ್ಟ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷರಾಗಿರುವ ಎಚ್‌ಡಿ ಕುಮಾರಸ್ವಾಮಿಗೆ ನೋಟಿಸ್‌ ಜಾರಿಗೊಳಿಸಿದೆ.

ತಮ್ಮನ್ನು ಉಚ್ಚಾಟಿಸಿರುವ ಮತ್ತು ಅಧ್ಯಕ್ಷ ಹುದ್ದೆಗೆ ತಾತ್ಕಾಲಿಕವಾಗಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ಅವರ ಮೂಲ ದಾವೆಯನ್ನು ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶವನ್ನು ರದ್ದು ಮಾಡಬೇಕೆಂದು ಕೋರಿ ಸಿ.ಎಂ. ಇಬ್ರಾಹಿಂ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ನ್ಯಾ.ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದೆ.

ಕೆಲವು ತಿಂಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡ ಅವರು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಕಾರಣ ನೀಡಿ ಸಿಎಂ ಇಬ್ರಾಹಿಂ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿದ್ದರು.

ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷ ಸಂಘಟನೆ, ಬಲವರ್ದನೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಮೈತ್ರಿ ಮಾಡಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಸರ್ವಾನುಮತದಿಂದ ಪಕ್ಷದ ಸಭೆಗಳಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಹೊಂದಾಣಿಕೆ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ ಎಂದು ಗೌಡರು ತಿಳಿಸಿದ್ದರು.

ಪಕ್ಷದ ಅಧ್ಯಕ್ಷರಿಗೆ ತಿಳಿಸದೇ ಮೈತ್ರಿ ನಿರ್ಣಯಗಳನ್ನು ಹೇಗೆ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿ ಸಿಎಂ ಇಬ್ರಾಹಿಂ ಅವರು ಗೌಡರ ವಿರುದ್ಧ ಸಮರ ಸಾರಿದ್ದರು.

Tags:    

Similar News