ಬಿಜೆಪಿ ವಿರುದ್ಧ '40% ಕಮಿಷನ್' ಜಾಹೀರಾತು: ಕಾಂಗ್ರೆಸ್, ಡಿಕೆಶಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಡಿ.ಕೆ. ಶಿವಕುಮಾರ್ ಪರವಾಗಿ ಹಿರಿಯ ವಕೀಲರಾದ ಕೆ. ಶಶಿಕಿರಣ್ ಶೆಟ್ಟಿ ಮತ್ತು ಸೂರ್ಯ ಮುಕುಂದರಾಜ್ ವಾದ ಮಂಡಿಸಿದರೆ, ಕೆಪಿಸಿಸಿ ಪರವಾಗಿ ವಕೀಲರಾದ ಎಸ್.ಎ. ಅಹ್ಮದ್ ಮತ್ತು ಸಂಜಯ್ ಯಾದವ್ ಹಾಜರಿದ್ದರು.;
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮಾಡಲಾಗಿದ್ದ "40% ಕಮಿಷನ್" ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಿ, ನ್ಯಾಯಾಲಯವು ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.
ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್. ಕೇಶವ ಪ್ರಸಾದ್ ಅವರು ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮತ್ತು ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಈ ವಿಚಾರಣೆ ವೇಳೆ, ಪ್ರಕರಣಕ್ಕೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದೆ.
ಡಿ.ಕೆ. ಶಿವಕುಮಾರ್ ಪರವಾಗಿ ಹಿರಿಯ ವಕೀಲರಾದ ಕೆ. ಶಶಿಕಿರಣ್ ಶೆಟ್ಟಿ ಮತ್ತು ಸೂರ್ಯ ಮುಕುಂದರಾಜ್ ವಾದ ಮಂಡಿಸಿದರೆ, ಕೆಪಿಸಿಸಿ ಪರವಾಗಿ ವಕೀಲರಾದ ಎಸ್.ಎ. ಅಹ್ಮದ್ ಮತ್ತು ಸಂಜಯ್ ಯಾದವ್ ಹಾಜರಿದ್ದರು.
ಪ್ರಕರಣದ ಹಿನ್ನೆಲೆ: ಜಾಹೀರಾತು ಸಮರ
2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರವನ್ನು ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದ ಕಾಂಗ್ರೆಸ್ ಪಕ್ಷವು ಮೇ 5ರಂದು ಎಲ್ಲಾ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತುಗಳನ್ನು ಪ್ರಕಟಿಸಿತ್ತು. "ಭ್ರಷ್ಟಾಚಾರ ದರ ಪಟ್ಟಿ" ಎಂಬ ಶೀರ್ಷಿಕೆಯಡಿಯಲ್ಲಿ, ವಿವಿಧ ಸರ್ಕಾರಿ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಲಾಗಿತ್ತು.
ಜಾಹೀರಾತಿನಲ್ಲಿ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ 25-30% ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅಲ್ಲದೆ, ಜಾಹೀರಾತಿನ ಕೊನೆಯಲ್ಲಿ, "40% ಕಮಿಷನ್ನ (ಬಿಜೆಪಿ) ಸರ್ಕಾರವು ಕಳೆದ ನಾಲ್ಕು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ" ಎಂದು ಪ್ರಮುಖವಾಗಿ ನಮೂದಿಸಿತ್ತು.
ಬಿಜೆಪಿ ಆಕ್ಷೇಪ ಮತ್ತು ಕಾನೂನು ಸಮರ
ಈ ಜಾಹೀರಾತುಗಳಿಂದ ತಮ್ಮ ಪಕ್ಷದ "ಡಬಲ್ ಇಂಜಿನ್ ಸರ್ಕಾರ"ದ ವರ್ಚಸ್ಸಿಗೆ ಹಾನಿಯಾಗಿದೆ ಮತ್ತು ಚುನಾವಣಾ ಗೆಲುವಿಗೆ ಅಡ್ಡಿಯಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಜಾಹೀರಾತಿನ ಕೊನೆಯಲ್ಲಿ ಕಾಂಗ್ರೆಸ್ಗೆ ಮತ ನೀಡುವಂತೆ ಕೇಳಿಕೊಂಡಿರುವುದು ಪ್ರಚಾರದ ಭಾಗವಾಗಿದೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನೇರ ಕಾರಣ ಎಂದು ಬಿಜೆಪಿ ಆರೋಪಿಸಿತ್ತು.
ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದರಿಂದ ಅವರ ವಿರುದ್ಧವೂ ಮಾನನಷ್ಟ ಆರೋಪ ಮಾಡಲಾಗಿತ್ತು. ಬಿಜೆಪಿ ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನಹಾನಿ) ಮತ್ತು 500 (ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಕಾಂಗ್ರೆಸ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜಾಮೀನು ಪಡೆದುಕೊಂಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಈಗಾಗಲೇ ತಡೆಯಾಜ್ಞೆ ನೀಡಿತ್ತು.