Honey Trap | ಹನಿಟ್ರ್ಯಾಪ್ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ; ʼಪ್ರಭಾವಿʼ ನಾಯಕನಿಗೆ ಎದುರಾಯ್ತು ಆತಂಕ
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮಂಗಳವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.;
ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಹಸ್ತಾಂತರಿಸಿದೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಸಚಿವ ರಾಜಣ್ಣ ಅವರು ಮಾರ್ಚ್ 20 ರಂದು ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿತ್ತು. ಜೊತೆಗೆ 48 ಕ್ಕೂ ಹೆಚ್ಚು ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದರು. ಇದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಕೋಲಾಹಲಕ್ಕೆ ಕಾರಣವಾಗಿತ್ತು.
ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಚಿವ ರಾಜಣ್ಣ ಅವರು ಮೂರು ಪುಟಗಳ ದೂರನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ದೂರಿನ ಅರ್ಜಿಯನ್ನು ಡಿಜಿಪಿಗೆ ರವಾನಿಸಿದ್ದರು.
ಸಚಿವ ರಾಜಣ್ಣ ಅವರ ಪುತ್ರನಾದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಗುರುವಾರ ಬೆಂಗಳೂರಿನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸಿಐಡಿ ಅಧಿಕಾರಿಗಳು ಈಗಾಗಲೇ ತಮ್ಮ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನೆಯ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಹೇಳಿದ್ದಾರೆ.