Hubballi Riot | ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಪ್ರಕರಣಗಳ ವಾಪಸ್‌ ಅಸಿಂಧು ; ಸರ್ಕಾರಕ್ಕೆ ಮುಖಭಂಗ ತಂದ ಹೈಕೋರ್ಟ್ ಆದೇಶ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ​ ದ್ವಿಸದಸ್ಯ ಪೀಠವು ಸರ್ಕಾರದ ಆದೇಶವನ್ನು "ಅಸಿಂಧು" ಎಂದು ಆದೇಶಿಸಿದೆ.;

Update: 2025-05-29 11:30 GMT

ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ ಒಟ್ಟು 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ʼಅಸಿಂಧುʼ ಎಂದಿರುವ ಕರ್ನಾಟಕ ಹೈಕೋರ್ಟ್‌, ಪ್ರಕರಣಗಳ ಸಂಬಂಧ ಕ್ರಿಮಿನಲ್‌ ವಿಚಾರಣೆ ಮುಂದುವರಿಸುವಂತೆ ಆದೇಶಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.   

ವಿವಿಧ ಸಂಘಟನೆಗಳ ಹೋರಾಟಗಾರರು, ರಾಜಕಾರಣಿಗಳ ಮೇಲಿನ ಒಟ್ಟು 43 ಪ್ರಕರಣಗಳನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್‌ ಭಾರದ್ವಾಜ್‌ ಎಂಬುವರು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 

2024 ಅಕ್ಟೋಬರ್ ೧೦ ರಂದು ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ರದ್ದುಪಡಿಸಲು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ  ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ, ಆದೇಶ ಪ್ರಕಟಿಸಿದೆ.  

ಅರ್ಜಿ ವಿಚಾರಣೆ ವೇಳೆಯೂ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಲಯದ ಹೇಳಿತ್ತು. ಇಂದು ವಾದ-ವಿವಾದ ಪೂರ್ಣಗೊಂಡ ಬಳಿಕ ಆದೇಶ ನೀಡಿದೆ. 

ಹುಬ್ಬಳ್ಳಿ ಗಲಭೆ ಪ್ರಕರಣ ಏನು?

ಇಸ್ಲಾಂ ಧರ್ಮಕ್ಕೆ ಸಂಬಂಧಿಸಿ ಅವಹೇಳನಕಾರಿ ಪೋಸ್ಟ್‌ ಪ್ರಕಟವಾದ ಹಿನ್ನೆಲೆಯಲ್ಲಿ 2022 ಏ.16ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿತ್ತು. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಂಭೀರ ಗಾಯಗಳಾಗಿದ್ದವು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಪ್ರಕರಣದಲ್ಲಿ 150ಕ್ಕೂ ಹೆಚ್ಚು ಮಂದಿ ವಿರುದ್ಧ ಗಲಭೆ, ಕೊಲೆ ಯತ್ನ ಪ್ರಕರಣ ದಾಖಲಿಸಿದ್ದರು. ಘಟನೆ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ಕೂಡ ತನಿಖೆ ನಡೆಸಿತ್ತು. 

2024ರ ಅ.10ರಂದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಸಂಪುಟದಲ್ಲಿ ತೀರ್ಮಾನಿಸಿತ್ತು. ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷಗಳು ಟೀಕಿಸಿದರೆ, ಅಂಜುಮನ್-ಎ-ಇಸ್ಲಾಂ ಸಂಘಟನೆ ಸ್ವಾಗತಿಸಿತ್ತು. ಸಂಪುಟದ ನಿರ್ಣಯವಾದ ಎರಡೂವರೆ ತಿಂಗಳಲ್ಲಿ ಪ್ರಕರಣಗಳ ರದ್ದತಿಗೆ ಆದೇಶ ಹೊರಡಿಸಲಾಗಿತ್ತು.

ಸಿಜೆ ಅವರಿಗೆ ಕೊನೆ ಪ್ರಕರಣವಾದ ಹುಬ್ಬಳ್ಳಿ ಗಲಭೆ 

ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದು, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ಹುಬ್ಬಳ್ಳಿ ಗಲಭೆಯ ಕುರಿತಾದ ತಮ್ಮ ಕೊನೆಯ ತೀರ್ಪು ಪ್ರಕಟಿಸಿದರು. ಈ ವೇಳೆ ಮಾತನಾಡಿದ ಸಿಜೆ ಎನ್‌.ವಿ. ಅಂಜಾರಿಯಾ ಅವರು, ನಿಮ್ಮೆಲ್ಲರಿಗೂ ಧನ್ಯವಾದಗಳು. ಈ ಪೀಠದಲ್ಲಿ ಕುಳಿತು ನನ್ನ ಕೊನೆಯ ತೀರ್ಪು ನೀಡಿದ್ದೇನೆ. ಸಹಕಾರ ನೀಡಿದ ಎಲ್ಲಾ ವಕೀಲರು, ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.  

Tags:    

Similar News