ಚನ್ನಪಟ್ಟಣದಲ್ಲಿ ನಾನೇ ಎನ್‌ಡಿಎ ಅಭ್ಯರ್ಥಿ: ಸಿ ಪಿ ಯೋಗೇಶ್ವರ್

Update: 2024-07-05 12:46 GMT

ಚನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರು ಎಂಬ ಕುತೂಹಲದ ನಡುವೆ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ತಾವೇ ಎನ್‌ಡಿಎ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಚನ್ನಪಟ್ಟಣದಲ್ಲಿ ಮಾತನಾಡಿರುವ ಅವರು, ʻʻಎಚ್‌ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ನನಗೆ ಸ್ಪರ್ಧಿಸುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆʼʼ ಎಂದು ಹೇಳಿದರು.

ʻʻಕಳೆದ ವಾರ ನಾನು ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ಮಾಡಿದೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ಹೋಗುತ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಆದರೆ, ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನೇ ಕಣಕ್ಕಿಳಿಯುವಂತೆ ಹೇಳಿದ್ದಾರೆʼʼ ಎಂದು ಸ್ಪಷ್ಟಪಡಿಸಿದರು.

"ಕಾಂಗ್ರೆಸ್‌ನವರು ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್‌ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರುವುದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರೋದಾ? ಚನ್ನಪಟ್ಟಣದ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನರು ಉತ್ತರ ಕೊಡುತ್ತಾರೆ" ಎಂದು ಡಿ.ಕೆ ಶಿವಕುಮಾರ್‌ ವಿರುದ್ಧ ಟೀಕೆ ಮಾಡಿದರು.

"ಕಳೆದ ವಾರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಉಪಚುನಾವಣೆ ದೃಷ್ಟಿಯಲ್ಲಿ ಮಾಡಿರುವ ಸರ್ಕಾರಿ ಸಂತೆ ಅದು. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರುವ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ ಮಾಡಿದ್ದಾರೆ. ಕಳೆದ ಒಂದೂಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ" ಎಂದು ಯೋಗೇಶ್ವರ್‌ ಟೀಕಿಸಿದರು.

"ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳುತ್ತಿದ್ದಾರೆ. ಜನರಿಗೆ ಮನೆ ಕೊಡುತ್ತೇನೆ, ಸೈಟ್ ಕೊಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ. ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆಗೆ ಟೈಂ ನಲ್ಲಿ ಮನೆ ಕೊಡ್ತೀವಿ ಅನ್ನೋದು ಸುಳ್ಳು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ" ಎಂದು ಡಿಕೆ ಶಿವಕುಮಾರ್ ವಿರುದ್ಧ ಅವರು ಕಿಡಿಕಾರಿದ್ದಾರೆ.

Tags:    

Similar News