ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್‌ಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.;

Update: 2025-05-09 12:11 GMT

ಕೆಪಿಸಿಎಲ್ ವಿದ್ಯುತ್ ಸ್ಥಾವರ

ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ ಮುಖ್ಯವಾಗಿದ್ದು, ಎಲ್ಲಾ ಜಲಾಶಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸಂಪೂರ್ಣ ಭದ್ರತೆ ಒದಗಿಸಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದೆ.

ಕೆಪಿಸಿಎಲ್ ವತಿಯಿಂದ ಜಲ, ಉಷ್ಣ, ಪವನ, ಸೌರ, ಅನಿಲ ಮತ್ತು ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ಮಿಸಲಾಗಿದೆ. ಜಲ ವಿದ್ಯುತ್ ಉತ್ಪಾದನೆಗಾಗಿ ಹಲವು ಜಲಾಶಯಗಳನ್ನು ನಿರ್ಮಿಸಲಾಗಿದೆ. ಈ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಜಲಾಶಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದರ ಬೆನ್ನಲ್ಲೇ, ಪ್ರಮುಖ ಜಲಾಶಯಗಳು ಮತ್ತು ಸ್ಥಾವರಗಳ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ. ಜತೆಗೆ ಹೆಚ್ಚಿನ ಸಹಕಾರ ನೀಡುವಂತೆ ಕೆಪಿಸಿಎಲ್ ಅಧಿಕಾರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್‌ಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಅದರಲ್ಲೂ ಮುಖ್ಯವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಧ್ಯಯನ ದೃಷ್ಟಿಯಿಂದ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಭೇಟಿ ನೀಡುತ್ತಾರೆ. ಪ್ರಸ್ತುತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯಂತೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ. 

Tags:    

Similar News