ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ; ಐಪಿಎಲ್‌ನಲ್ಲಿ ಮಿಂಚಿದ್ದ ಜೈಸ್ವಾಲ್‌, ರಾಹುಲ್‌ಗೆ ನಿರಾಸೆ

ವೇಗದ ಬೌಲರ್‌ ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದ್ದರೆ, ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ.;

Update: 2025-08-19 13:31 GMT
ಸಾಂದರ್ಭಿಕ ಚಿತ್ರ

ಸೆಪ್ಟೆಂಬರ್‌ 9 ರಿಂದ ಯುಎಇನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಏಷ್ಯಾಕಪ್‌ಗೆ ಬಿಸಿಸಿಐ 15ಸದಸ್ಯರ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ ಮಿಂಚಿದ್ದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಹಾಗೂ ಕನ್ನಡಿಗ ಕೆ.ಎಲ್‌. ರಾಹುಲ್‌ಗೆ ಸ್ಥಾನ ಸಿಗದಿರುವುದು ನಿರಾಸೆ ಮೂಡಿಸಿದೆ.

ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಇಂಗ್ಲೆಂಡ್‌ ಸರಣಿಯಲ್ಲಿ ಮಿಂಚಿದ್ದ ಶುಭ್​ಮನ್ ಗಿಲ್ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಈ ತಂಡದಲ್ಲಿ ಬೌಲರ್‌ ಮೊಹಮ್ಮದ್ ಸಿರಾಜ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್ ಅಯ್ಯರ್, ವಿಕೆಟ್‌ ಕೀಪರ್‌ ರಿಷಭ್ ಪಂತ್ ಇರುವುದು ವಿಶೇಷ.

ವೇಗದ ಬೌಲರ್‌ ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದೆ. ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ತಂಡದ ಆರಂಭಿಕರಾಗಿ ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್ ಇದ್ದಾರೆ. ಮೂರನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಇರಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಹಾಗೆಯೇ ಬೌಲರ್​​ಗಳಾಗಿ ಕುಲದೀಪ್‌ ಯಾದವ್, ಹರ್ಷದೀಪ್ ಸಿಂಗ್‌, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ. 

ಏಷ್ಯಾ ಕಪ್ ತಂಡ ಇಂತಿದೆ 

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಏಷ್ಯಾಕಪ್ ವೇಳಾಪಟ್ಟಿ

ಸೆ. 10ರಂದು ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆ. 14ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಸೆ. 19ರಂದು ಒಮನ್‌ ವಿರುದ್ಧ ಮೂರನೇ ಪಂದ್ಯ ಇರಲಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡ ಎರಡು ಪಂದ್ಯ ಜಯಿಸಿದರೆ ಸೂಪರ್-4 ಹಂತಕ್ಕೆ ಅರ್ಹತೆ ಪಡೆಯಲಿದೆ.

Tags:    

Similar News